ಅಮಿತ್ ಶಾ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಆಕ್ಷೇಪಾರ್ಹ ಹೇಳಿಕೆ:ಚುನಾವಣಾ ಆಯೋಗಕ್ಕೆ ದೂರು..!

Views: 64
ಬೆಂಗಳೂರು: ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಬಿಜೆಪಿ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ‘ಗೂಂಡಾ, ರೌಡಿಯಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ’ ಎಂದು ಆರೋಪಿಸಿದ್ದರು.
ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರೌಡಿ ಸಂಸ್ಕೃತಿ ಕಾಂಗ್ರೆಸ್ನಲ್ಲಿದೆ, ನಮ್ಮ ಪಕ್ಷದಲ್ಲಿಲ್ಲ. ಈ ರೌಡಿ ಸಂಸ್ಕೃತಿ ಬಿಜೆಪಿಯಲ್ಲಿಲ್ಲ, ಕಾಂಗ್ರೆಸ್ನಲ್ಲಿ ಮಾತ್ರ ಇದೆ ಎಂದು ಹೇಳಿದರು.
‘ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಗೆ ಮೈಸೂರಿನಿಂದ ಪುತ್ರ ಯತೀಂದ್ರ ಅವರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಟಿಕೆಟ್ ಕೈತಪ್ಪಿದ್ದರಿಂದ ಯತೀಂದ್ರ ಹತಾಶೆಗೊಂಡಿದ್ದಾರೆ. ಅದಕ್ಕೇ ಇಷ್ಟೆಲ್ಲ ಹೇಳುತ್ತಿದ್ದಾರೆ. ಅವರು ಚಿಕ್ಕ ಮಗು, ರಾಜಕೀಯದಲ್ಲಿ ಅನುಭವ ಇಲ್ಲ. ಇಂತವರು ಬಿಜೆಪಿ ಮತ್ತು ಅದರ ನಾಯಕತ್ವದ ವಿರುದ್ಧ ಮಾತನಾಡುತ್ತಲೇ ಇರುತ್ತಾರೆ. ಆದರೆ, ಬಿಜೆಪಿ ಬಲಿಷ್ಠವಾಗುತ್ತದೆ’ ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಮುಖಂಡ ಸಿಟಿ ರವಿ ಮಾತನಾಡಿ, ‘ಯತೀಂದ್ರ ಅವರು ಅಪ್ಪನ ಹೆಸರಲ್ಲಿ ರಾಜಕೀಯಕ್ಕೆ ಬಂದವರು. ಆದರೆ, ಅಮಿತ್ ಶಾ ಹಾಗಲ್ಲ. ಬೂತ್ ಮಟ್ಟದಲ್ಲಿ ಬೂತ್ ಅಧ್ಯಕ್ಷರಾಗಿ ಕೆಲಸ ಮಾಡಿದರು ಮತ್ತು ನಂತರ ಉನ್ನತ ಸ್ಥಾನಕ್ಕೇರಿದವರು. ತಂದೆಯ ಹೆಸರಿನಲ್ಲಿ ಅವರು ರಾಜಕೀಯಕ್ಕೆ ಬರಲಿಲ್ಲ. ತಂದೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆ ನಡೆದುಕೊಳ್ಳುತ್ತಾರೆ’ ಎಂದು ದೂರಿದರು.
ಚುನಾವಣಾ ಆಯೋಗಕ್ಕೆ ದೂರು
ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅತ್ಯಂತ ಅನುಚಿತ ಪದಗಳನ್ನು ಬಳಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಮತ್ತು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಎನ್ ರವಿಕುಮಾರ್ ಹೇಳಿದ್ದಾರೆ.
.