‘ಅಸಂವಿಧಾನಿಕ’ ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Views: 54
ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್, ಅದನ್ನು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಅನಾಮಧೇಯ ಮೂಲಗಳಿಂದ ನಿಧಿ ಸಂಗ್ರಹಕ್ಕೆ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಅನಾಮಧೇಯ ಚುನಾವಣಾ ಬಾಂಡ್ಗಳು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್ ಪ್ರೊ ಪ್ರೊ ಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್ ಹೇಳಿದೆ.
ಕಾಳಧನ ನಿಯಂತ್ರಣಕ್ಕೆ ಚುನಾವಣಾ ಬಾಂಡ್ ಯೋಜನೆ ಒಂದೇ ಆಯ್ಕೆಯಲ್ಲ ಎಂದಿರುವ ಸುಪ್ರೀಂ ಕೋರ್ಟ್, ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್ಟಿಐ ಉಲ್ಲಂಘನೆಯಾಗಬಾರದು. ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, 2023ರ ನವೆಂಬರ್ನಲ್ಲಿ ಮೂರು ದಿನಗಳ ಕಾಳ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.






