ಶಿಕ್ಷಣ

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ನಿಯಮ ತಿದ್ದುಪಡಿ -ವಿದ್ಯಾರ್ಥಿಸ್ನೇಹಿ ನಿಯಮ ಜಾರಿ 

Views: 76

ಬೆಂಗಳೂರು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದ್ದು, ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಜಾರಿಗೊಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ 3 ವಾರ್ಷಿಕ ಪರೀಕ್ಷೆಗಳನ್ನು ನಡೆಸುತ್ತಿದೆ. ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಇದ್ದ ನಿಯಮವನ್ನು ತಿದ್ದುಪಡಿ ಮಾಡಿದೆ.

ಹೊಸ ನಿಯಮದ ಪ್ರಕಾರ ಮೊದಲ ಪ್ರಯತ್ನದಲ್ಲಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಮೊದಲ ಪರೀಕ್ಷೆಗೆ ಹಾಜರಾಗದಿದ್ದರೂ 2 ಮತ್ತು 3ನೇ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು ಕಲ್ಪಿಸಿದೆ. ಆದರೆ, ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಪರೀಕ್ಷಾ ಮಂಡಳಿಗೆ ದತ್ತಾಂಶ ಬೇಕು ಎಂಬ ಕಾರಣದಿಂದ ನಿಯಮವನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಈ ಹಿಂದೆ ಅನುತ್ತೀರ್ಣರಾಗಿರುವ ಮತ್ತು ಹಿಂದಿನ ವರ್ಷಗಳಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕೂಡ ಮೊದಲ ಪರೀಕ್ಷೆಗೆ ನೋಂದಣಿ ಅಥವಾ ಹಾಜರಾಗಬೇಕೆಂಬ ನಿಯಮವಿಲ್ಲ. 2 ಅಥವಾ 3ನೇ ಪರೀಕ್ಷೆಗೆ ನೇರವಾಗಿ ನೋಂದಣಿ ಮಾಡಿಕೊಂಡು ಹಾಜರಾಗಬಹುದು.

ಅಂಕ ಸುಧಾರಣೆ ವ್ಯವಸ್ಥೆಯಲ್ಲೂ ಬದಲಾವಣೆ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಂಡ ಎಲ್ಲ ವಿದ್ಯಾರ್ಥಿಗಳಿಗೆ ಅಂಕಗಳ ಸುಧಾರಣಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಈ ಮೊದಲಿದ್ದ ನಿಯಮಗಳ ಪ್ರಕಾರ, ಅಭ್ಯರ್ಥಿಯೊಬ್ಬ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕವನ್ನು ನಿರಾಕರಿಸಿ 2ನೇ ಬಾರಿ ಪರೀಕ್ಷೆ ಬರೆದರೆ 2ನೇ ಬಾರಿ ಬರೆದ ಪರೀಕ್ಷೆಯ ಅಂಕವನ್ನು ಪರಿಗಣಿಸಲಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗೆ ಅನ್ಯಾಯವಾಗುತ್ತಿತ್ತು.

ಉದಾಹರಣೆಗೆ ಮೊದಲ ಪರೀಕ್ಷೆಯಲ್ಲಿ 50 ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಯು 2ನೇ ಪರೀಕ್ಷೆಯಲ್ಲಿ 25 ಅಂಕ ಪಡೆದು ಅನುತ್ತೀರ್ಣರಾದರೆ, ಅಭ್ಯರ್ಥಿಯನ್ನು ಅನುತ್ತೀರ್ಣರೆಂದು ಪರಿಗಣಿಸಲಾಗುತ್ತಿತ್ತು. ಈ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಹೊಸ ನಿಮಯಗಳ ಪ್ರಕಾರ ಎರಡೂ ಪರೀಕ್ಷೆಯಲ್ಲಿ ಉತ್ತಮವಾದ ಅಂಕವನ್ನು ಪರಿಗಣಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಯು 2ನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೂ ಭಯ ಪಡುವ ಅಗತ್ಯವಿಲ್ಲ.

 

 

Related Articles

Back to top button