ಕಾರು ಪರಿಶೀಲನೆಗೆ ತೆರಳಿದ್ದ ವೇಳೆ ಇನ್ನೊಂದು ಕಾರುಡಿಕ್ಕಿಯಾಗಿ ಕಾನ್ಸ್ಟೇಬಲ್ ಸಾವು

Views: 0
ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ವೇಳೆ ದೇವನಹಳ್ಳಿ ಠಾಣೆಯ ಕಾನ್ಸ್ಟೇಬಲ್ ದುರಂತ ಅಂತ್ಯ ಕಂಡಿದ್ದು, ಇನ್ಸ್ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾನುವಾರ ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್ಟೇಬಲ್ ಸುರೇಶ್ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದರು.
ಇದೇ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಪಕ್ಕದಲ್ಲಿಯೇ ನಿಂತಿದ್ದ ಇನ್ಸ್ಪೆಕ್ಟರ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಡಿಕ್ಕಿ ಹೊಡೆದ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದರು. ಇವರು ನಂದಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ಕಾಲು ಮುರಿದಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.