ಗಾಲಿ ಜನಾರ್ದನ ರೆಡ್ಡಿ ಶಾಸಕತ್ವ ರದ್ದು

Views: 35
ಕನ್ನಡ ಕರಾವಳಿ ಸುದ್ದಿ: ಓಬಳಾಪುರ ಮೈನಿಂಗ್ ಪ್ರಕರಣದಲ್ಲಿ 7 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರ ಶಾಸಕತ್ವ ರದ್ದುಗೊಂಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಹೈದರಬಾದ್ನ ಚಂಚಲಗುಡ ಜೈಲಿಗೆ ರೆಡ್ಡಿ ಅವರನ್ನು ಸ್ಥಳಾಂತರ ಮಾಡಲಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕಾಯ್ದೆ 1951ರ ಸೆಕ್ಷನ್ 8 ಹಾಗೂ ಸಂವಿಧಾನದ ಪರಿಚ್ಚೇದ 191(1) ಪ್ರಕಾರ ಜನಾರ್ದನ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ.
ವಿಶೇಷ ಸಿಬಿಐ ನ್ಯಾಯಾಲಯವು ಪಕ್ಷೇತರ ಶಾಸಕ ಹಾಗೂ ಬಿಜೆಪಿ ಬೆಂಬಲಿತ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ಏಳು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿದ ಬೆನ್ನಲ್ಲೇ, ಸ್ಪೀಕರ್ ಯು.ಟಿ.ಖಾದರ್ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಈ ಸಂಬಂಧ ಗುರುವಾರದಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷೀ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮೇ 6ರಂದು ಹೈದ್ರಾಬಾದ್ನ ವಿಶೇಷ ಸಿಬಿಐ ನ್ಯಾಯಾಲಯವು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತೀರ್ಪು ನೀಡಿದೆ. ಹೀಗಾಗಿ ಭಾರತ ಸಂವಿಧಾನದ 191(1)(ಇ) ವಿಧಿಯ ನಿಬಂಧನೆಗಳ ಪ್ರಕಾರ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದಿದ್ದಾರೆ.
ನ್ಯಾಯಾಲಯವು ಶಿಕ್ಷೆಯನ್ನು ತಡೆಹಿಡಿಯದ ಹೊರತು ಶಾಸಕ ಜನಾರ್ದನ ರೆಡ್ಡಿ ಅವರ ಅನರ್ಹತೆಯು ಮುಂದಿನ ಆರು ವರ್ಷಗಳ ಅವಧಿಯವರೆಗೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.