ಧರ್ಮಸ್ಥಳದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ದಾಂಪತ್ಯ ಜೀವನಕ್ಕೆ ಕಾಲಿಟ್ಟ 75 ಜೋಡಿ

Views: 86
ಕನ್ನಡ ಕರಾವಳಿ ಸುದ್ದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶನಿವಾರ 75 ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಸಂಜೆ ಗಂಟೆ 6.48ರ ಗೋಧೂಳಿ ಲಗ್ನದ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆಯಿತು. ಅವರವರ ಜಾತಿ, ಸಂಪ್ರದಾಯದಂತೆ ಧಾರ್ಮಿಕ ವಿಧಿ, ವಿಧಾನಗಳನ್ನು ನಡೆಸಲಾಯಿತು. ಸುಶ್ರಾವ್ಯವಾದ ಶೋಭಾನೆ ಹಾಡುಗಳು, ವಧು-ವರರಿಗೆ ಆರತಿ ಕಾರ್ಯಕ್ರಮ ಮದುವೆಗೆ ಮೆರುಗು ನೀಡಿತು.
ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ನವ ದಂಪತಿಗಳಿಗೆ ಶುಭ ಹಾರೈಸಿ, ”ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಸೇವೆಯಾಗಿದೆ. ನಾಡಿನೆಲ್ಲೆಡೆ ಬಹುಮುಖಿ ಸಮಾಜಸೇವಾ ಕಾರ್ಯಗಳ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿಯೂ ಹಣದ ಮಿತಬಳಕೆ, ಉಳಿತಾಯ ಹಾಗೂ ಸಮರ್ಪಕ ಹೂಡಿಕೆ ಬಗ್ಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವೆ ಹಾಗೂ ಸಾಧನೆ ಶ್ಲಾಘನೀಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
”ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಕಾಯಕವಾಗಿದೆ. ಕಳೆದ 52 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹದಲ್ಲಿ 1,2900 ಜೋಡಿ ವಿವಾಹವಾಗಿದೆ.
ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಮಾತನಾಡಿ, ”ಸನಾತನ ಪರಂಪರೆಯಲ್ಲಿ ಷೋಡಶ ಸಂಸ್ಕಾರಗಳಲ್ಲಿ ಮದುವೆ ಎಂಬುದು ಭಾವನಾತ್ಮಕ ಸಂಬಂಧ ಹೊಂದಿದೆ. ಈ ಪವಿತ್ರ ಬಂಧನಕ್ಕೊಳಗಾದ ದಂಪತಿ ಸಮಾನವಾಗಿ ಸುಖ-ಕಷ್ಟ, ನೋವು-ನಲಿವು ಎಲ್ಲವನ್ನೂ ಶಾಂತಿ ಮತ್ತು ತಾಳ್ಮೆಯಿಂದ ಅನುಭವಿಸಿ ಧನ್ಯತಾಭಾವ ಹೊಂದಿರಬೇಕು. ಸಾರ್ಥಕ ಜೀವನ ನಡೆಸಬೇಕು” ಎಂದು ಸಲಹೆ ನೀಡಿದರು.
”ಸಾಮೂಹಿಕ ವಿವಾಹದಲ್ಲಿ ಮದುವೆ ಆದವರು ದುಂದುವೆಚ್ಚ ಮಾಡಬಾರದು. ಸತ್ಕಾರಕೂಟ, ನಿಶ್ಚಿತಾರ್ಥ, ಅತಿಥಿ ಸತ್ಕಾರಕ್ಕೆಂದು ಅನಗತ್ಯ ವೆಚ್ಚ ಮಾಡಬಾರದು. ಸಾಮೂಹಿಕ ವಿವಾಹ ಪ್ರಸ್ತುತ ಹೆಚ್ಚು ಜನಪ್ರಿಯವಾಗುತ್ತಿದ್ದು, ತಮಗೆ ಧನ್ಯತಾಭಾವ ಮೂಡಿದೆ” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ವಧು -ವರರಿಗೆ ಪ್ರಮಾಣ ವಚನ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಗಳ ಮುಹೂರ್ತದಲ್ಲಿ ವಧು-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ ಮತ್ತು ಕಾಮಗಳಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ ಎಂದು ನೂತನ ವಧುವರರು ಪ್ರಮಾಣ ವಚನ ಸ್ವೀಕರಿಸಿದರು.