ಮಂಗಳೂರು:ಉಪನ್ಯಾಸಕಿ ಕುಸಿದು ಬಿದ್ದು ಸಾವು, ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!

Views: 196
ಮಂಗಳೂರು:ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನ.13 ರಂದು ನಡೆದಿದೆ.
23 ವರ್ಷ ವಯಸ್ಸಿನ ಗ್ಲೋರಿಯಾ ರೊಡ್ರಿಗಸ್ ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಕಾರಣ ಎಂದು ತಿಳಿದುಬಂದಿದೆ.ಕಾಲೇಜಿನ ವಾಣಿಜ್ಯ ವಿಭಾಗದ ಅಧ್ಯಾಪಕರಾಗಿದ್ದ ರೋಡ್ರಿಗಸ್ ಅವರು ಕೆಲವು ದಿನಗಳ ಹಿಂದೆ ಊಟ ಮಾಡಿದ ಕೂಡಲೇ ಅವರ ದೇಹದ ಮೇಲೆ ಅಲರ್ಜಿಯ ಪ್ರತಿಕ್ರಿಯೆ ಕಾಣಲಾರಂಭಿಸಿತು. ದೇಹದ ಚರ್ಮದ ಮೇಲೆ ದದ್ದುಗಳು ಏಳಲಾರಂಭಿಸಿತು. ಇದು ತೀವ್ರವಾದ ಮೆದುಳಿನ ಕಾಂಡದ ಅಸಾಧಾರಣ ಕ್ರಿಯೆಗೆ ಕಾರಣವಾಯಿತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯರ ಎರಡು ತಂಡಗಳು ಆಕೆಯನ್ನು 2 ಬಾರಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಪರಿಣಾಮ ಆಕೆಯ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ದೃಢಪಡಿಸಿದರು. ಆ ಬಳಿಕವೇ ಕುಟುಂಬಸ್ಥರು ಆಕೆಯ ಅಂಗಾಂಗ ದಾನಕ್ಕೆ ಮುಂದಾದರು.
ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ!
ಅವರ ಅಂಗಾಂಗಗಳನ್ನು ಐದು ನಿರ್ಗತಿಕ ರೋಗಿಗಳಿಗೆ ಬುಧವಾರ ದಾನ ಮಾಡಲಾಯಿತು.ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇತರೆ ರೋಗಿಗಳಿಗೆ ಕಸಿ ಮಾಡಲಾಗಿದ್ದು, ಎರಡು ವಿಶೇಷ ಶಸ್ತ್ರ ಚಿಕಿತ್ಸೆ ಮೂಲಕ ವೈದ್ಯರು ಅಂಗಾಂಗ ಕಸಿ ಮಾಡಿದ್ದಾರೆ ಎನ್ನಲಾಗಿದೆ.
ರೋಡ್ರಿಗಸ್ ಅವರ ಯಕೃತ್ತನ್ನು ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಕೆಯ ಅಕಾಲಿಕ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.