ರಾಜಕೀಯ

ಮಾನನಷ್ಟ ಪ್ರಕರಣ:ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

Views: 70

ಕನ್ನಡ ಕರಾವಳಿ ಸುದ್ಧಿ: ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬುರಾವ್ (ತಬಸ್ಸುಮ್ ) ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ

ತಬುರಾವ್ ದಾಖಲಿಸಿದ್ದ ಖಾಸಗಿ ದೂರು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್ 16ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಶಾಸಕ ಯತ್ನಾಳ್‌ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ, ಯತ್ನಾಳ್ ವಿಚಾರಣೆಗೆ ಗೈರಾದ ಹಿನ್ನೆಲೆ, ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ : ಲೋಕಸಭೆ ಚುನಾವಣೆಯ ಸಂದರ್ಭ ಏಪ್ರಿಲ್ 4ರಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತ್ನಾಳ್ “ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದರು.

ಯತ್ನಾಳ್ ಹೇಳಿಕೆಯ ವಿರುದ್ದ ತಬು ರಾವ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಲ್ಲದೆ, ಪತ್ರಿಕಾ ವರದಿಗಳು ಸೇರಿದಂತೆ ಹಲವು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಯತ್ನಾಳ್ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿ ಪ್ರಕರಣ ದಾಖಲಿಸಲು ಕೋರಿದ್ದರು. ಅದನ್ನು ಪರಿಗಣಿಸಿದ್ದ ನ್ಯಾಯಾಲಯ ಯತ್ನಾಳ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

ತನ್ನ ವಿರುದ್ದ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡು ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು.

 

Related Articles

Back to top button