ಇತರೆ

ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

Views: 145

ಕನ್ನಡ ಕರಾವಳಿ ಸುದ್ದಿ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಐವರು ದೋಷಿಗಳು ಎಂದು ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಜೊತೆಗೆ, ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ನ್ಯಾಂಪಲ್ಲಿಯ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಪ್ರಕಟವಾದ ತೀರ್ಪಿನಲ್ಲಿ ಕರ್ನಾಟಕದ ಮಾಜಿ ಸಚಿವ, ಹಾಲಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದು 13 ವರ್ಷದ ಹಿಂದೆ, 29 ಲಕ್ಷ ಟನ್ ಅದಿರು ಕಳ್ಳತನ ಮಾಡಿರುವ ಗಂಭೀರ ಪ್ರಕರಣವಾಗಿದೆ. ಕರ್ನಾಟಕದಿಂದ ಆಂಧ್ರ ಪ್ರದೇಶಕ್ಕೆ ಈ ಅದಿರನ್ನು ಅಕ್ರಮವಾಗಿ ರವಾನಿಸಲಾಗಿತ್ತು. ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿತ್ತು. 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಗಣಿ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿ ವೈ.ಶ್ರೀಲಕ್ಷ್ಮಿ ಅವರನ್ನು 2022ರಲ್ಲಿ ಪ್ರಕರಣದಿಂದ ಬಿಡುಗಡೆ ಮಾಡಲಾಗಿದೆ.

₹884.13 ಕೋಟಿ ಲೂಟಿ ಆರೋಪ: 2007ರಲ್ಲಿ ಶ್ರೀಲಕ್ಷ್ಮಿ ಅವರು ಓಎಂಸಿ ಕಂಪನಿಯ ಅರ್ಜಿ ಪರಿಗಣಿಸಬೇಕು ಎಂದು ಶಿಫಾರಸು ಮಾಡಿದ್ದರು. ಅದೇ ದಿನ ಓಎಂಸಿಗೆ ಕಬ್ಬಿಣದ ಅದಿರು ಗಣಿಗಾರಿಕೆಗೆ ಅನುಮತಿಸಿ ಸರ್ಕಾರಿ ಆದೇಶ ಹೊರಡಿಸಲಾಗಿತ್ತು. ಕರ್ನಾಟಕದ ಅರಣ್ಯ ಭೂಮಿ ಪ್ರದೇಶ ಸೇರಿದಂತೆ ಗುತ್ತಿಗೆ ನೀಡಿದ್ದ ಪ್ರದೇಶವನ್ನೂ ಮೀರಿ ಗಾಲಿ ಜನಾರ್ದನ ರೆಡ್ಡಿ ಮತ್ತು ಕಂಪನಿ ಅಕ್ರಮವಾಗಿ ಕಬ್ಬಿಣದ ಅದಿರನ್ನು ಗಣಿಗಾರಿಕೆ ಮಾಡಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 884.13 ಕೋಟಿ ರೂ. ನಷ್ಟವಾಗಿದೆ ಎಂದು ಸಿಬಿಐ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ

ಕೊನೆಗೂ ನ್ಯಾಯ ಸಿಕ್ಕಿದೆ-ಟಪಾಲ್ ಗಣೇಶ್: “13 ವರ್ಷಗಳ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ರಾಜಕೀಯ ಪ್ರಭಾವ ಬಳಸಿಕೊಂಡು ಅದಿರು ಕದ್ದಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ದೋಷಿಯಾಗಿದ್ದಾರೆ. ಸಿಬಿಐ ನ್ಯಾಯಾಲಯದ ತೀರ್ಪು ಸಂತಸ ತಂದಿದೆ” ಎಂದು ಪ್ರಮುಖ ದೂರುದಾರ, ಉದ್ಯಮಿ ಟಪಾಲ್ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

 

Related Articles

Back to top button