ಇತರೆ

ಸುರತ್ಕಲ್: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು, ಓರ್ವ ರಕ್ಷಣೆ

Views: 284

ಕನ್ನಡ ಕರಾವಳಿ ಸುದ್ದಿ: ಮಂಗಳೂರು ನಗರದ ಸುರತ್ಕಲ್ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ‌ಸಮುದ್ರಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30) ಹಾಗೂ ಬೆಂಗಳೂರು ಜೆ.ಪಿ. ನಗರದ ನಿವಾಸಿ ಸತ್ಯವೇಲು (30) ಮೃತ ವಿದ್ಯಾರ್ಥಿಗಳು. ಬೀದರ್ ಜಿಲ್ಲೆಯ ಹಂಗರಗಾ ನಿವಾಸಿ ಪರಮೇಶ್ವರ್‌ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಪರಸ್ಪರ ಸ್ನೇಹಿತರಾಗಿದ್ದರು. ಇವರೆಲ್ಲರೂ ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು, ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದ ಇವರು, ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭದಲ್ಲಿ ನೀರುಪಾಲಾಗಿದ್ದರು.

ಯುವಕರು ಸಮುದ್ರದ ಸೆಳೆತಕ್ಕೆ ಸಿಲುಕುತ್ತಿರುವುದನ್ನು ಗಮನಿಸಿದ ಸ್ಥಳೀಯ, ಮೀನುಗಾರರು ತಕ್ಷಣ ರಕ್ಷಣೆಗೆ ಮುಂದಾಗಿದರು. ಆದರೆ ಅಷ್ಟರಲ್ಲಾಗಲೇ ಮೂವರು ನೀರುಪಾಲಾಗಿದ್ದಾರೆ. ಓರ್ವನನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಮೃತದೇಹಗಳು ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಹಜರು ನಡೆಸಿ ಎ.ಜೆ. ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related Articles

Back to top button