ಸಾಂಸ್ಕೃತಿಕ

ಅಗಸ್ಟ್ 17 ಮತ್ತು 18 ರಂದು ಬೆಂಗಳೂರಿನಲ್ಲಿ  “ವಿಶ್ವ ಕುಂದಾಪ್ರ ಕನ್ನಡ ಹಬ್ಬ” 

Views: 100

ಬೆಂಗಳೂರು :ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆಗಸ್ಟ್ 17 ಮತ್ತು 18ರಂದು ವಿಶ್ವ ಕುಂದಾಪ್ರ ಕನ್ನಡ ಹಬ್ಬ   ನಡೆಯಲಿದೆ.ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’ವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ.

ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬದ ಪೋಸ್ಟರ್ ಅನಾವರಣಗೊಳಿಸಲಾಯಿತು.

ಮೈದಾನದಲ್ಲಿ 5ನೇ ವಿಶ್ವ ಕುಂದಾಪ್ರ ಕನ್ನಡ ಹಬ್ಬಭಾನುವಾರ ಸಂಜೆ 5ರ ಸಮರೋಪ ಸಮಾರಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ ಎಂದು ದೀಪಕ್ ಹೇಳಿದರು.

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಇರಲಿದ್ದಾರೆ.

ಇದೇ ಮೊದಲು ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿ ಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ.

ದಿನವಿಡೀಯ ವಿಶೇಷ ಏನು?

ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕುಂದಾಪುರ ಕನ್ನಡ ಹಬ್ಬದ ಕಾರ್ಯಕ್ರಮಗಳು

ಆಗಸ್ಟ್ 17, ಶನಿವಾರ

ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.

ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ನಿಂದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.

ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಆಗಸ್ಟ್ 18, ಭಾನುವಾರ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ

ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.

ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ

ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.

ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.

ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ

ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ

ಸಂಜೆ 4.30: ರಥೋತ್ಸವ

ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

 

 

Related Articles

Back to top button
error: Content is protected !!