ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

Views: 342
ಕುಂದಾಪುರ: ದೇವಸ್ಥಾನದ ಒಳಗೆ ಪ್ರವೇಶಿಸುವ ಮುನ್ನ ಸನಾತನ ಹಿಂದು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುವಂತೆ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಪುರುಷರು ಹಾಗೂ ಮಹಿಳಾ ಭಕ್ತರು ಬರ್ಮುಡ,ತುಂಡು ಉಡುಗೆ (ಶಾರ್ಟ್ಸ್) ಇತ್ಯಾದಿ ಉಡುಪುಗಳನ್ನು ದೇವಸ್ಥಾನದ ಒಳಗಡೆ ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು. ಇದಕ್ಕೆ ಹಿಂದು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ದೇವಾಲಯಗಳ ಒಳಗೆ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದೇವರ ದರ್ಶನಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದವು.
ಈ ಸಂಬಂಧ ರಾಜ್ಯದ ಎಲ್ಲಾ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು.
ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗೆ ಹೋಗುವಂತಿಲ್ಲ. ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ.








