ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ: 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
Views: 42
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಜುಲೈ ತಿಂಗಳ ಆರಂಭದಿಂದಲೇ ಉತ್ತಮ ಮಳೆಯಾಗುತ್ತಿದ್ದು ಇದೀಗ ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಲಿರುವ ಬಲವಾದ ಗಾಳಿಯೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಗಳ ಪ್ರಕಾರ, ರಾಜ್ಯದ 8 ಪ್ರಮುಖ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿಲಿಮೀಟರ್ನಿಂದ ಹಿಡಿದು ಬರೋಬ್ಬರಿ 115.4 ಮಿಲಿಮೀಟರ್ನಷ್ಟು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ತೀವ್ರತೆಯನ್ನು ಪರಿಗಣಿಸಿ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ‘ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು ಸಾರ್ವಜನಿಕರು ಅನಗತ್ಯವಾಗಿ ಆಚೆ ಬರದೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಕೋರಲಾಗಿದೆ.
ಐಎಂಡಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶಗಳ ಪ್ರಕಾರ, ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಅತ್ಯಂತ ಹೆಚ್ಚಾಗಿರಲಿದೆ. ಮಲೆನಾಡು ಮತ್ತು ಕರಾವಳಿ ಭಾಗದ ನದಿ ತೀರದ ನಿವಾಸಿಗಳು ಹಾಗೂ ತಗ್ಗು ಪ್ರದೇಶಗಳ ಜನರಿಗೆ ನೈಸರ್ಗಿಕ ವಿಕೋಪ ಕೇಂದ್ರವು ಈಗಾಗಲೇ ಹೈ ಅಲರ್ಟ್ ಸಂದೇಶ ರವಾನಿಸಿದೆ.






