ಕಾರ್ಕಳ: ಹಣಕ್ಕೆ ಬೇಡಿಕೆ ಆರೋಪ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸಹಿತ ಮೂವರ ಅಮಾನತು
Views: 70
ಕನ್ನಡ ಕರಾವಳಿ ಸುದ್ದಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, ವೀಡಿಯೋಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್ಪಿ ಅವರಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ತನಿಖಾ ವರದಿ ಮೇರೆಗೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್, ಡಿವೈಎಸ್ಪಿ ಕಚೇರಿ ಸಿಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.
ವಿಜಯ್ ಪ್ರಸಾದ್ ಅವರು ಡಾ| ಹರ್ಷ ಪ್ರಿಯಂವದ ಅವರ ವರ್ಗವಾಣೆ ಅನಂತರ ಹುದ್ದೆಗೆ ನಿಯೋಜನೆಗೊಂಡಿದ್ದರು. ವೃತ್ತ ನಿರೀಕ್ಷಕ ಸಂದೀಪ್ ಇತ್ತೀಚೆಗೆ ನೇಮಕವಾಗಿದ್ದರು.
ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಇನ್ನಷ್ಟು ತನಿಖೆ ನಡೆಯುತ್ತಿದ್ದು, ಅಂತಿಮ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಮುಂದಿನ ಆಡಳಿತಾತ್ಮಕ ಅಥವಾ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.






