ಕುಂದಾಪುರ ತಾಲೂಕಿನಾದ್ಯಂತ ಧಾರಾಕಾರ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

Views: 234
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೆ ಧಾರಾಕಾರ ಮಳೆ ಸುರಿದಿದೆ.
ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪರಿಣಾಮ ಬೆಳಗಿನ ಜಾವ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ವ್ಯತ್ಯಯವಾಗಿತ್ತು.
ಪಶ್ಚಿಮ ಘಟ್ಟ ತಪ್ಪಲು ಪ್ರದೇಶದಲ್ಲಿ ಹರಿಯುವ ಕುಂದಾಪುರದ ಪಂಚ ನದಿಗಳಾದ ಸೌಪರ್ಣಿಕ, ವಾರಾಹಿ, ಖೇಟಾ, ಚಕ್ರಾ, ಕುಬ್ಜಾ ನದಿಗಳು ತುಂಬಿ ಹರಿಯುತ್ತಿರುವುದರಿಂದ ನದಿ ತೀರದ ಜನರು ತೊಂದರೆ ಅನುಭವಿಸುವಂತಾಗಿದೆ. ತುಂಬಿ ಹರಿಯುವ ಹೊಳೆ ದಾಟಲು ಸೇತುವೆ ಇಲ್ಲದೆ ಜನರು ಪರದಾಡುವ ಸ್ಥಿತಿ ಉಂಟಾಗಿದೆ.

ಬೈಂದೂರು ಪ್ರದೇಶದಲ್ಲಿ ಒಮ್ಮೆಲೆ ಸುರಿದು ಗಾಳಿ ಮಳೆಯಿಂದಾಗಿ ಹಲವಾರು ಮನೆಯ ಮೇಲ್ಛಾವಣಿ ಹಾರಿಸಿಕೊಂಡು ಹೋಗಿದೆ.
ಬೈಂದೂರು ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿಯ ಶಾಲೆಗಳಿಗೆ ಇಂದು ಜು.4 ರಂದು ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ವಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಇಡೀ ಬೈಂದೂರು ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.
ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈ ಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಎಚ್ಚರ ವಹಿಸಲು ತಿಳಿಸಿದ್ದಾರೆ






