ಕುಂದಾಪುರ: ವಿಪರೀತ ಮೊಬೈಲ್ ಬಳಕೆಯಿಂದ ಸಿಟ್ಟುಗೊಂಡು ಪತ್ನಿಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತಿ

Views: 90
ಕನ್ನಡ ಕರಾವಳಿ ಸುದ್ದಿ: ಮೊಬೈಲ್ ಬಳಕೆಯಿಂದ ಸಿಟ್ಟುಗೊಂಡ ಪತಿ, ತನ್ನ ಪತ್ನಿಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಹೊಸಮಠ ಎಂಬಲ್ಲಿ ಘಟನೆ ಜೂ.19 ರಾತ್ರಿ ನಡೆದಿದೆ.
ಕೊಲೆಗೀಡಾದ ರೇಖಾ(27) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ರೇಖಾ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸಕ್ಕಿದ್ದರು. ಈ ಮಧ್ಯೆ ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಈ ಬಗ್ಗೆ ಈ ಹಿಂದೆ ಶಂಕರನಾರಾಯಣ ಪೊಲೀಸರಿಗೆ ದೂರು ಅರ್ಜಿ ನೀಡಲಾಗಿದ್ದು ಅವರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡಿದ್ದರು.
ಆದರೆ ಗಣೇಶ್ ತನ್ನ ಚಾಳಿ ಮುಂದುವರೆಸಿದ್ದು ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ್ದ. ಪತ್ನಿಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಕುಂದಾಪುರ ವೃತ್ತನಿರೀಕ್ಷಕ ಜಯರಾಮ್ ಗೌಡ, ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ನಾಸೀರ್ ಹುಸೇನ್ ಮತ್ತು ಸಿಬ್ಬಂದಿ ಪತ್ತೆಮಾಡಿ ಬಂಧಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.