ಕೋಟದಲ್ಲಿ ವೇಷ ಕಳಚುತ್ತಿರುವಾಗಲೇ ಧರ್ಮಸ್ಥಳ ಮೇಳದ ಕಲಾವಿದ ಹೃದಯಾಘಾತದಿಂದ ಸಾವು

Views: 282
ಉಡುಪಿ:ಹೃದಯಾಘಾತದಿಂದ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60) ಅವರು ವೇಷ ಕಳಚುತ್ತಿರುವಾಗಲೇ ಇಹಲೋಕ ತ್ಯಜಿಸಿದ್ದಾರೆ.

ಬುಧವಾರ ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಅವರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.






