ಗೃಹ ಲಕ್ಷ್ಮೀ ಯೋಜನೆಯಡಿ ಯಜಮಾನಿ ಖಾತೆಗೆ ರೂ.2000 ಇಂದು ಚಾಲನೆ

Views: 0
ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಎನಿಸಿದ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಚಾಲನೆ ದೊರೆಯಲಿದ್ದು, ಈ ಸಮಾರಂಭಕ್ಕೆ ಜಿಲ್ಲೆಯಿಂದ 260 ಬಸ್ಗಳಲ್ಲಿ ಫಲಾನುಭವಿಗಳು ತೆರಳಲಿದ್ದಾರೆ.
ರಾಜ್ಯ ಸರಕಾರ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಸಹಾಯ ಧನವನ್ನು ಮಹಿಳೆಯರಿಗೆ ನೀಡುತ್ತಿದೆ. ಆ ಯೋಜನೆಗೆ ಬುಧವಾರ ಚಾಲನೆ ದೊರೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಪ್ರಮುಖ ನಾಯಕರು, ಸಚಿವರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯಿಂದಲೇ 13 ರಿಂದ 15 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಪೂರ್ವಭಾವಿ ಸಭೆಗಳನ್ನು ನಡೆಸಿ, ಯೋಜನೆ ಕುರಿತು ಮಾಹಿತಿ ನೀಡಲಾಗಿದೆ.
ಅಲ್ಲದೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮಾರಂಭಕ್ಕೆ ಫಲಾನುಭವಿಗಳನ್ನು ಕರೆದೊಯ್ಯಲಾಗುತ್ತಿದೆ. ಜಿಲ್ಲೆಯಲ್ಲದೇ ಮೈಸೂರು ಸುತ್ತಮುತ್ತಲ ಎಲ್ಲ ಜಿಲ್ಲೆಗಳಿಂದಲೂ ಫಲಾನುಭವಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
2.46 ಲಕ್ಷ ಫಲಾನುಭವಿಗಳು
ಜಿಲ್ಲೆಯಲ್ಲಿ ಒಟ್ಟು 2.77 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಆದರೆ, ಈವರೆಗೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉಪಯೋಗಕ್ಕಾಗಿ 2.46 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಈ ಮಹಿಳೆಯರಲ್ಲಿ ಗೃಹಲಕ್ಷ್ಮಿ ಯೋಜನೆ ಮಾನದಂಡದಂತೆ ಎಲ್ಲ ದಾಖಲಾತಿ, ಬ್ಯಾಂಕ್ ವಿವರ ಎಲ್ಲವೂ ಸಮರ್ಪಕವಾಗಿದ್ದಲ್ಲಿ ಮಾಸಿಕ 2 ಸಾವಿರ ರೂ. ಅನ್ನು ನೇರ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮ ವೀಕ್ಷಣೆ ಸಕಲ ಸಿದ್ಧತೆ
ಮೈಸೂರಿನಲ್ಲಿ ನಡೆಯಲಿರುವ ಯೋಜನೆಗೆ ಚಾಲನೆ ಕಾರ್ಯಕ್ರಮದ ವೀಕ್ಷಣೆಗೆ ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗ್ರಾಮ ಪಂಚಾಯಿತಿಗಳಲ್ಲಿ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೆ, ಫಲಾನುಭವಿಗಳು ಮನೆಯಲ್ಲೇ ಕುಳಿತೇ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ.
ನಾಲತವಾಡ ಪಪಂ ಹಾಗೂ ನಾಡಗೌಡ ಅವರ ವಾಡೆ ಆವರಣದಲ್ಲಿ ನೇರ ಪ್ರಸಾರದ ವೀಕ್ಷಣೆಗೆ ಪಪಂ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಶಾಸಕ ಸಿ.ಎಸ್.ನಾಡಗೌಡ ಸಹ ಕ್ಷೇತ್ರದ ನಾನಾ ಕಡೆಗಳಲ್ಲಿ ಭೇಟಿ ನೀಡಿ ಗೃಹಲಕ್ಷ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಚಾರ ಕೈಗೊಂಡಿದ್ದು, 30 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮ ವೀಕ್ಷಿಸುವ ನಿರೀಕ್ಷೆ ಇದೆ.








