ಧ್ವಜಾರೋಹಣ ವೇಳೆ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾವು
Views: 22
ಕನ್ನಡ ಕರಾವಳಿ ಸುದ್ದಿ: ಒಳ ಮೀಸಲಾತಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಜನರ ಪರವಾಗಿ ನಡೆಯುತ್ತಿದ್ದ ಹೋರಾಟಗಳಲ್ಲಿ ಭಾಗಿಯಾಗುತ್ತಿದ್ದ ಹಾಗೂ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುತ್ತಿದ್ದ ಆದಿ ಜಾಂಬವ ಸಮಾಜದ ಮುಖಂಡರೂ ಆಗಿದ್ದ ರಾಜ್ಯ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ದುರುಗಪ್ಪ ಎಸ್. ಮಾಳಗಿ ಅವರು ಆಗಸ್ಟ್ 15 ಶನಿವಾರ ನಿಧನರಾದರು.
ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ತಮ್ಮದೇ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಮಾಳಗಿ ಅವರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಸವಣೂರು ತಾಲ್ಲೂಕಿನ ತವರಮೆಳ್ಳಿಹಳ್ಳಿ ಗ್ರಾಮದ ಡಿ.ಎಸ್. ಮಾಳಗಿ, ಆದಿ ಜಾಂಬವ ಹಾಗೂ ಶೋಷಿತ ಸಮುದಾಯದ ಹಕ್ಕುಗಳಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ರಾಜ್ಯ ಲಿಡ್ಕರ್ ನಿಗಮದ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಒಳ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿದ್ದರು.
‘ಶಿಕ್ಷಣವೇ ಶೋಷಿತ ಸಮುದಾಯದ ಅಭಿವೃದ್ಧಿಗೆ ಪ್ರಮುಖ ಸಾಧನ’ ಎಂದು ಅರಿತಿದ್ದ ಮಾಳಗಿ ಅವರು ಜಿಲ್ಲೆಯ ಹಲವು ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು.






