ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

Views: 351
ಕನ್ನಡ ಕರಾವಳಿ ಸುದ್ದಿ: ಹತ್ತು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಆತನನ್ನು ಕರೆತರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಿದ್ದರು.
ಏನಿದು ನಿಗೂಢ ನಾಪತ್ತೆ ಪ್ರಕರಣ
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ದಿಗಂತ್, ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.