ಶಿಕ್ಷಣ

ನೇಮಕಾತಿ ಆದೇಶ ನೀಡದ ಸರ್ಕಾರ, ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ ಸಹಾಯಕ ಪ್ರಾಧ್ಯಾಪಕರು

Views: 61

ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿ 11 ತಿಂಗಳು ಕಳೆದರೂ ನೇಮಕಾತಿ ಆದೇಶ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಭ್ಯರ್ಥಿಗಳು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ಇಂದಿನಿಂದ (ಜುಲೈ 19, 2024) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ ಆರಂಭವಾಗಿದ್ದು, ‘ನೇಮಕಾತಿ ಆದೇಶಗಳು, ನೇಮಕಾತಿ ಪತ್ರಗಳು ಮತ್ತು ಸಹಾಯಕ ಪ್ರಾಧ್ಯಾಪಕರ ಕೌನ್ಸೆಲಿಂಗ್ ವೇಳಾಪಟ್ಟಿಯ ಗೆಜೆಟ್ ಹೊರಡಿಸುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾದ್ಯಾಪಕರಾಗಿ 26 ವಿಷಯಗಳ 1242 ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ್ದು, ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯ ನಂತರ 1208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು 02-02-2023ರಂದು ಕೆಇಎ ಪ್ರಕಟಿಸಿದೆ.

ಈ ಅಂತಿಮ ಆಯ್ಕೆಪಟ್ಟಿಯನ್ನು ರಾಜ್ಯ ಸರ್ಕಾರವು ತನ್ನ ರಾಜ್ಯ ಪತ್ರದಲ್ಲಿ ದಿನಾಂಕ:03-11-2023 ರಂದು ಪ್ರಕಟಿಸಿದೆ. ಅದರಂತೆ 1208 ಅಭ್ಯರ್ಥಿಗಳಲ್ಲಿ 1000 ಕ್ಕಿಂತ ಹೆಚ್ಚು ಅಭ್ಯರ್ಥಿಗಳ ಎಲ್ಲ ರೀತಿಯ ನೈಜ ಪರೀಶೀಲನೆ ಮುಕ್ತಾಯವಾಗಿದ್ದು ಇಲಾಖೆಗೆ ಸಲ್ಲಿಕೆಯಾಗಿದೆ. ಅಂತಿಮ ಆಯ್ಕೆಪಟ್ಟಿ ಪ್ರಕಟವಾಗಿ 11 ತಿಂಗಳಾದರೂ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಸರ್ಕಾರವು ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ ಮಾಡಿದೆ.

ಆಯ್ಕೆಯಾಗಿರುವ ಬಹುತೇಕ ಅಭ್ಯರ್ಥಿಗಳು ಗ್ರಾಮೀಣ ಭಾಗದ ಬಡವರ್ಗದ ನಿರುದ್ಯೋಗಿಗಳಾಗಿದ್ದು, ನೇಮಕಾತಿ ಆದೇಶ ನೀಡುವಲ್ಲಿ ವಿಳಂಬವಾಗಿರುವುದರಿಂದಾಗಿ, ನಾವು ಯಾವುದೇ ಕೆಲಸವಿಲ್ಲದೇ ಮಾನಸಿಕವಾಗಿ ಕುಗ್ಗಿಹೋಗಿದ್ದೇವೆ ಎಂದು ಅಭ್ಯರ್ಥಿಗಳು ಅಸಹಾಯಕತೆ ಹೊರಹಾಕಿದ್ದಾರೆ.

ಇದೀಗ, ನೇಮಕಾತಿ ಆದೇಶ ನೀಡುವಂತೆ ಆಯ್ಕೆಯಾಗಿರುವ ಸಹಾಯಕ ಪ್ರಾಧ್ಯಾಪಕರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಶಾಂತಿಯುತ, ಅಹಿಂಸಾತ್ಮಕ ಸತ್ಯಾಗ್ರಹ ಆರಂಭಿಸಿದ್ದಾರೆ. ಆ ಮೂಲಕ, ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

Related Articles

Back to top button
error: Content is protected !!