ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಗುಡುಗು, ಮಿಂಚು,ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ
Views: 46
ಕನ್ನಡ ಕರಾವಳಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ತೀವ್ರತೆಯಿಂದಾಗಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಎಲ್ಲಡೆ ಜೋರಾಗಿದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 29ಕ್ಕೆ ವರೆಗೂ ಮಳೆ ಅಬ್ಬರ ಇರಲಿದೆ ಎಂದು ಗೊತ್ತಾಗಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ
ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 28 ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.






