ಬಿಬಿಎಂಪಿ ಆಟದ ಮೈದಾನದ ಗೇಟ್ ಮೈಮೇಲೆ ಬಿದ್ದು ಬಾಲಕ ಸಾವು

Views: 48
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಟದ ಮೈದಾನದ ಗೇಟ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ನಿರಂಜನ್ (11) ಮೃತ ಬಾಲಕ. ಕಬ್ಬಿಣದ ಗೇಟ್ ಮೈಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ನಿರಂಜನ್ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಪೋಷಕರೊಂದಿಗೆ ಪ್ಯಾಲೇಸ್ ಗುಟ್ಟಹಳ್ಳಿಯ ವಿವೇಕಾನಂದ ಬ್ಲಾಕ್ನಲ್ಲಿ ವಾಸವಿದ್ದ ನಿರಂಜನ್, ಇಂದು ಮಧ್ಯಾಹ್ನ ಆಟವಾಡಲು ಮಲ್ಲೇಶ್ವರಂನ ರಾಜಶಂಕರ್ ಆಟದ ಮೈದಾನಕ್ಕೆ ಬಂದಿದ್ದ. ಮೈದಾನದ ಕಬ್ಬಿಣದ ಗೇಟ್ ತೆಗೆಯುವಾಗ ಏಕಾಏಕಿ ಮೈಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ನಿರಂಜನ್ನನ್ನು ಪೋಷಕರು ಕೆ.ಸಿ.ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ರಕ್ತಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಗ್ಗೆ ತನಿಖೆ ಮುಂದುವರೆದಿದೆ.






