ಬ್ರಹ್ಮಾವರ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ:ಬಾಕಿ ಇರಿಸಿದ್ದ ಪ್ರಮುಖ ದಾಖಲೆಗಳು ವಶಕ್ಕೆ
Views: 116
ಕನ್ನಡ ಕರಾವಳಿ ಸುದ್ದಿ: ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಅಪರಾಹ್ನ ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿ ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲಿಸಿದರು.
ದಾಳಿಯ ವೇಳೆ ಕಚೇರಿಯಲ್ಲಿ ನಿಯಮ ಬಾಹಿರವಾಗಿ ವಿಲೇವಾರಿ ಮಾಡಲಾಗಿದ್ದ ಹಾಗೂ ಸಾರ್ವಜನಿಕರನ್ನು ಅಲೆದಾಡಿಸಿ ವರ್ಷಗಟ್ಟಲೆ ವಿಲೇವಾರಿಗೆ ಬಾಕಿ ಇರಿಸಲಾಗಿದ್ದ ನೂರಾರು ಕಡತಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಅಕ್ರಮಕ್ಕೆ ಸಾಕ್ಷಿಯಾಗಿದ್ದ ಹಲವು ಪ್ರಮುಖ ದಾಖಲೆಗಳನ್ನು ಲೋಕಾಯುಕ್ತ ತಂಡ ತನ್ನ ವಶಕ್ಕೆ ಪಡೆದುಕೊಂಡಿದೆ.
ಬೆಂಗಳೂರು ಲೋಕಾಯುಕ್ತ ಕಚೇರಿಯಿಂದ ಶೋಧನಾ ವಾರಂಟ್ ಪಡೆದು ನಡೆಸಿದ ಈ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.
ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ, ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಭಾರತಿ ಸೇರಿದಂತೆ ಉಡುಪಿ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.






