ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಸುಮಲತಾ ಅಂಬರೀಶ್ ಹೇಳಿದ್ದೇನು?

Views: 163
ಉಡುಪಿ : ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪರ ಚುನಾವಣಾ ಪ್ರಚಾರ ಬಂದ ಬಿಜೆಪಿ ನಾಯಕಿ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಇಂತಹ ಪಕ್ಷದ ಪರ ಪ್ರಚಾರ ಮಾಡು ಎಂದು ನಾನು ಹೇಳಿಲ್ಲ ಎಂದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಕಣದಲ್ಲಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ.
ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ಪ್ರತಿದಿನ ಚರ್ಚೆ ಮಾಡಲ್ಲ. ಪ್ರತಿದಿನ ಫೋನು ಮಾಡಿ ಎಲ್ಲಿಗೆ ಹೋಗುತ್ತಿದ್ದೀಯ? ಯಾರ ಪರ ಪ್ರಚಾರ ಮಾಡುತ್ತಿದ್ದೀಯಾ? ಎಂದು ಕೇಳಲ್ಲ. ಪ್ರಚಾರ ಯಾರ ಪರ ಮಾಡಬೇಕು ಎನ್ನುವುದು ಅವರ ಇಚ್ಛೆ. ಹೋಗು ಹೋಗಬೇಡ ಎನ್ನಲು ನಾನು ಯಾರು? ಎಂದು ಸುಮಲತಾ ಪ್ರಶ್ನಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಮಲತಾ, ನಾನು ಯಾವ ರೀತಿ ಪ್ರಚಾರ ಮಾಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ. ನಾನು ನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಕುಮಾರಸ್ವಾಮಿ ಪರ ಖಂಡಿತ ಪ್ರಚಾರ ಮಾಡುತ್ತೇನೆ. ನಾನಂತೂ ಯಾರನ್ನು ಭೇಟಿ ಮಾಡಿಲ್ಲ. ಮಂಡ್ಯದಲ್ಲಿ ಒಳ್ಳೆ ರಿಸಲ್ಟ್ ಬರುತ್ತೆ ಎಂದು ಹೇಳಿದರು.






