ಮುಂದಿನ ದಿನಗಳಲ್ಲಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದುಗೆ ಸ್ವಾಮೀಜಿ ಒತ್ತಾಯ

Views: 83
ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ವಿಭಜಿಸಲು ಈ ಮೊದಲು ಚರ್ಚೆ ನಡೆದಿತ್ತು. ಹೋರಾಟದಿಂದ ಅದನ್ನು ಸ್ಥಗಿತಗೊಳಿಸಲಾಯಿತು. ಈಗ ಮತ್ತೆ ಅಂತಹುದೇ ಚರ್ಚೆ ನಡೆಯುತ್ತಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಎಲ್ಲರೂ ಮುಖ್ಯಮಂತ್ರಿಗಳಾಗಿ ಅಧಿಕಾರ ಅನುಭವಿಸಿದ್ದಾರೆ. ನಮ್ಮ ಡಿ.ಕೆ.ಶಿವಕುಮಾರ್ರವರು ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿಗಳಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಟ್ಟು, ಒಳ್ಳೆಯದಾಗಲಿ ಎಂದು ಅನುಗ್ರಹಿಸಬೇಕು. ಸಿದ್ದರಾಮಯ್ಯ ಅವರಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಡಿ.ಕೆ.ಶಿವಕುಮಾರ್ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಈ ವೇಳೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ರವರು ವೇದಿಕೆಯಲ್ಲಿದ್ದರು ಎಂಬುದು ಗಮನಾರ್ಹ.ನಂತರ ಮಾತನಾಡಿದ ಪಟ್ಟನಾಯ್ಕನಹಳ್ಳಿ ಶ್ರೀಕ್ಷೇತ್ರ ಶ್ರೀ ಸ್ಫಟಿಕಪುರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಂಜಾವಧೂತ ಸ್ವಾಮೀಜಿಯವರು, ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಾಧಿಕಾರ ರಚನೆ ಸೇರಿದಂತೆ ಹಲವು ಬೇಡಿಕೆಗಳಿಗೆ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ ಎಂದು ಶ್ಲಾಘಿಸಿದರು.
ಜಗಜ್ಯೋತಿ ಬಸವೇಶ್ವರರ ಫೋಟೋ ಹಾಕಿದಂತೆ ಬೆಂಗಳೂರಿನ ವ್ಯಾಪ್ತಿಗಳಲ್ಲಾದರೂ ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಅಳವಡಿಸಬೇಕು. ಕೆಜಿ ಯಿಂದ ಪಿಜಿ ಯವರೆಗೂ ನಾಡಪ್ರಭು ಅವರ ಪಠ್ಯವನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.






