ಮುಂದಿನ 3-4 ದಿನ ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
Views: 48
ಕನ್ನಡ ಕರಾವಳಿ ಸುದ್ದಿ: ಓಡಿಶಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದಲ್ಲಿ ಮುಂದಿನ 3-4 ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಕಾರಣದಿಂದ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಧಿಕಾರಿಗಳು ಜುಲೈ 18 ರಂದು ಅಂಗನವಾಡಿಯಿಂದ ಪಿಯುಸಿವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ
ಕರಾವಳಿ, ಮಲೆನಾಡು ಭಾಗದಲ್ಲಿ ಮಾನ್ಸೂನ್ ಮತ್ತೆ ಸಕ್ರಿಯವಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.18ರಿಂದ ಜು.20ವರೆಗೆ ಮತ್ತು ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ.
ಕರಾವಳಿ ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ತುಸು ಜೋರು ಮಳೆಯಾದರೆ ಕಾರವಾರ ಗುರುವಾರ ರಾತ್ರಿಯಿಡೀ ನಿರಂತರವಾಗಿ ಸುರಿದ ಭಾರಿ ಮಳೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯನ್ನು ತಲ್ಲಣಗೊಳಿಸಿದೆ. ಕರಾವಳಿಯ 50ಕ್ಕೂ ಹೆಚ್ಚು ಸ್ಥಳಗಳಲ್ಲಿ 24 ಗಂಟೆಗಳಲ್ಲಿ 130 ಮಿಮೀಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಹಲವೆಡೆ ಗುಡ್ಡ ಕುಸಿತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿದೆ. ಮನೆಗಳಿಗೂ ನೀರು ನುಗ್ಗಿದೆ. ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಯ ಒಳಗೆ ನೀರು ನುಗ್ಗಿದ್ದು, ಶುಕ್ರವಾರ ಬೆಳಗ್ಗೆ ಕೆಲವು ಸಮಯ ಪೂಜೆ ನಿಲ್ಲಿಸಲಾಯಿತು. ಗೋಕರ್ಣದ ಎಲ್ಲ ಬೀದಿಗಳು ಜಲಾವೃತವಾಗಿದ್ದವು. ಗೋಕರ್ಣ-ತದಡಿ ರಸ್ತೆಯ ಮೂಡಂಗಿ ಸಮೀಪ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತವಾಯಿತು.






