ಮೋಂಥಾ ಚಂಡಮಾರುತದ ಅಬ್ಬರ: ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
Views: 232
ಕನ್ನಡ ಕರಾವಳಿ ಸುದ್ದಿ:ಭಾರತೀಯ ಹವಾಮಾನ ಇಲಾಖೆ ಬುಧವಾರ ಮುಂಜಾನೆ ನೀಡಿದ ಮಾಹಿತಿಯ ಪ್ರಕಾರ, ‘ಮೋಂಥಾ’ ಎಂಬ ತೀವ್ರ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ದಾಟಿದ ನಂತರ ಸಾಮಾನ್ಯ ಚಂಡಮಾರುತವಾಗಿ ದುರ್ಬಲಗೊಂಡಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಿದೆ.
ಮೋಂಥಾ ಚಂಡಮಾರುತದ ಎಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಮುಂದಿನ 4 ದಿನ ಕರುನಾಡಿಗೆ ಮಳೆ ತಟ್ಟಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಒಟ್ಟು 7 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಕಾರಣ ಆರೆಂಜ್ ಅಲರ್ಟ್ ಕೊಡಲಾಗಿದೆ. ಅಲ್ಲದೆ ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ, ಕೊಡಗು, ಕೋಲಾರ ಹಾಗೂ ಮೈಸೂರು ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನೂ ನವೆಂಬರ್ 2 ರ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕ್ಷೀಣಿಸಲಿದೆ. ಸದ್ಯ ಹಿಂಗಾರು ಮಳೆ ಆರ್ಭಟಿಸುತ್ತಿದ್ದು ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ನವೆಂಬರ್ 2 ರ ನಂತರ ಬಿಸಿಲು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.






