ರಾಜ್ಯ ಬಿಜೆಪಿಯಲ್ಲಿ ಹಠಾತ್ ಬೆಳವಣಿಗೆ..! ದಿಢೀರ್ ದೆಹಲಿಗೆ ಹಾರಿದ ವಿಜಯೇಂದ್ರ, ಅಶೋಕ!

Views: 65
ಕನ್ನಡ ಕರಾವಳಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಹಠಾತ್ ಬೆಳವಣಿಗೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಮಂಗಳವಾರ ದಿಢೀರ್ ಆಗಿ ನವದೆಹಲಿಗೆ ಧಾವಿಸಿದರು.
ಬಿಜೆಪಿ ರಾಜ್ಯ ಘಟಕದಲ್ಲಿನ ಭಿನ್ನಮತದ ಕಾರಣಕ್ಕೆ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ಆರು ತಿಂಗಳಿಂದ ನನೆಗುದಿಗೆ ಬಿದ್ದಿದೆ. ವಿಜಯೇಂದ್ರ ಮುಂದುವರಿಕೆಗೆ ಭಿನ್ನರ ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಲು ಕೇಂದ್ರ ಸಚಿವ ವಿ.ಸೋಮಣ್ಣ ನಿರಂತರ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಆಕಾಂಕ್ಷೆ ತೋಡಿಕೊಂಡಿದ್ದಾರೆ. ಈ ನಡುವೆ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ತಟಸ್ಥರ ಗುಂಪು ಪ್ರತಿಪಾದಿಸಿದೆ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರು ರಾಜ್ಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣ ಹಾಗೂ ವಿವಾದ ಸೃಷ್ಟಿಸುತ್ತಿದೆ. ಆದರೆ, ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿಲ್ಲ’ ಎಂದು ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದರ ಬೆನ್ನಲ್ಲೇ, ಇಬ್ಬರು ನಾಯಕರು ರಾಷ್ಟ್ರ ರಾಜಧಾನಿಗೆ ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.
‘ರಾಜ್ಯ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯುವುದು ಬಹುತೇಕ ಖಚಿತ. ಆದರೆ, ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ ಸೇರಿದಂತೆ ಕೆಲವು ನಾಯಕರನ್ನು ರಾಜ್ಯ ಪದಾಧಿಕಾರಿಗಳನ್ನಾಗಿ ನೇಮಿಸಲು ವರಿಷ್ಠರು ಯೋಜಿಸಿದ್ದಾರೆ. ಈ ಮೂಲಕ ವಿಜಯೇಂದ್ರ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶವೂ ವರಿಷ್ಠರಿಗೆ ಇದೆ. ಈ ಬಗ್ಗೆ ಚರ್ಚಿಸಲು ಉಭಯ ನಾಯಕರನ್ನು ಕರೆಸಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲಿನಂತಾಗಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ವಿರುದ್ಧ ಈ ಹಿಂದೆ ವಿರೋಧ ಬಣ ಬಹಿರಂಗವಾಗಿ ಅಸಮಾಧಾನವನ್ನ ಹೊರ ಹಾಕಿತ್ತು. ಇದೀಗ ರಾಜ್ಯಕ್ಕೆ ಕೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತ ಬಿಜೆಪಿ ಹಿರಿಯ ಲಿಂಗಾಯತ ನಾಯಕ ಬಸವನ ಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬಳಿಕ ತಣ್ಣಗಾಗಿದ್ದ ಬಿಜೆಪಿ ಭಿನ್ನರ ಚಟುವಟಿಕೆ ಮತ್ತೆ ಜೋರಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ದಿನದಿಂದ ಇಲ್ಲಿಯವರೆಗೆ ವಿರೋಧಿ ಬಣ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿತ್ತು. ಅಲ್ಲದೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿಯನ್ನ ನಡೆಸಿದ್ದರು. ಯತ್ನಾಳ್, ರಮೇಶ್ ಜಾರಕಿಹೊಳಿ ಹಾಗೂ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿಯೂ ಒತ್ತಾಯಿಸಿದ್ದರು.
ಇತ್ತ ಯಡಿಯೂರಪ್ಪ ಮತ್ತೆ ಸಕ್ರಿಯ ರಾಜಕೀಯದಲ್ಲಿ ಆಕ್ಟಿವ್ ಆದ ಬೆನ್ನಲ್ಲೇ ಬೆಂಗಳೂರಿನ ಬಂಡಾಯ ನಾಯಕರ ಸಭೆ ನಡೆದಿದೆ. ಈ ನಡುವೆ ಬಿಜೆಪಿ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ಮತ್ತೆ ಮುನ್ನಲ್ಲೆಗೆ ಬಂದಿದೆ.
ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಅವರ ಪರವಾಗಿರುವುದಕ್ಕಿಂತ ವಿರೋಧಿಗಳ ಸಂಖ್ಯೆಯೇ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿಂದೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವು ಸಮುದಾಯದ ನಾಯಕರುಗಳು ಹೆಸರುಗಳು ಕೇಳಿ ಬಂದಿತ್ತು. ಒಕ್ಕಲಿಗ ಸಮುದಾಯದಿಂದ ಸಿ ಟಿ ರವಿ, ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಹಾಗೂ ಆರ್ ಅಶೋಕ್ ಅವರ ಹೆಸರು ಕೇಳಿ ಬಂದಿತ್ತು. ಅಲ್ಲದೇ ಲಿಂಗಾಯತ ಸಮುದಾಯದಿಂದ ವಿ ಸೋಮಣ್ಣ ಅವರ ಹೆಸರು ಕೇಳಿ ಬಂದಿದ್ರೆ, ಇತ್ತ ವಿರೋಧ ಬಣದಿಂದ ಕುಮಾರ ಬಂಗಾರಪ್ಪ ಅವರ ಹೆಸರು ಕೇಳಿ ಬಂದಿತ್ತು.
ಇನ್ನೂ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆ ನಡುವೆ ಕೇಂದ್ರ ಸಚಿವ ವಿ. ಸೋಮಣ್ಣ ಕೆಲವೇ ದಿನಗಳ ಹಿಂದೆ ವಿಜಯೇಂದ್ರ ವಿರೋಧಿ ಬಣದ ನಾಯಕರೊಂದಿಗೆ ಸಭೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಕೇಂದ್ರ ಸಚಿವ ವಿ. ಸೋಮಣ್ಣ ನೇತೃತ್ವದ ಬಂಡಾಯ ಬಿಜೆಪಿ ನಾಯಕರ ಸಭೆಯೊಂದಿಗೆ ಮತ್ತೆ ಭಿನ್ನಮತ ಚುರುಕುಪಡೆದಿದೆ. ಸೋಮಣ್ಣ ಅವರ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದು, ವಿಜಯೇಂದ್ರ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಕುಮಾರ್ ಬಂಗಾರಪ್ಪ, ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಒತ್ತಾಯವನ್ನು ಪುನರುಚ್ಚರಿಸಿದ್ದಾರೆ.