ರಾಮ ಮಂದಿರ ಚಳವಳಿ ಹಿರಿಯ ನಾಯಕ ಎಲ್.ಕೆ.ಅಡ್ವಾಣೆ ರಾಮ ಮಂದಿರ ಉದ್ಘಾಟನೆಯಲ್ಲಿ ಉಪಸ್ಥಿತಿ !

Views: 83
ನವದೆಹಲಿ: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಅಡ್ವಾಣಿ ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
2023ರ ಡಿಸೆಂಬರ್ನಲ್ಲಿ ವಿಎಚ್ಪಿ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಅಡ್ವಾಣಿ (96) ಮತ್ತು ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ (89) ಅವರಿಗೆ ಆಹ್ವಾನ ಪತ್ರಿಕೆ ಕಳುಹಿಸಿತ್ತು. ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಡ್ವಾಣಿ ಅವರಿಗೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಹಿಂದೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದರು. 1990ರ ದಶಕದಲ್ಲಿ ರಾಮ ಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ರಾಮ ಮಂದಿರದ ಕಾರ್ಯಕ್ರಮದಿಂದ ದೂರವಿರಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.






