ರೇಣುಕಾ ಯಲ್ಲಮ್ಮ ದೇಗುಲದಿಂದ ಬರುವಾಗ: ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಐವರ ದುರ್ಮರಣ

Views: 70
ಕನ್ನಡ ಕರಾವಳಿ ಸುದ್ದಿ: ಲಾರಿಗೆ ಕಾರು ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವ ಭೀಕರ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಭಾನುವಾರ ನಡೆದಿದೆ.
ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಸೇರಿ ಐವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಹೀಗಾಗಿ ಅವರು ಕಾರಿನಲ್ಲಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.
ಬೆಂಗಳೂರು ಮೂಲದ ಇನ್ನೋವಾ ಕಾರು, ತಮಿಳುನಾಡು ಪಾಸಿಂಗ್ ಇರುವ ಲಾರಿ ಹಿಂಬದಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪೃತಪಟ್ಟಿದ್ದಾರೆ. ಗುದ್ದಿದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.