ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ನಾಳೆ ರಾಜೀನಾಮೆ?
Views: 54
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಕಾಂಗ್ರೆಸ್ನಲ್ಲಿ ಬಲಾಡ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಚಿವರ ಮಕ್ಕಳಿಗೆ ಮಾತ್ರ ಅವಕಾಶ ಸಿಗುತ್ತಿದೆ’ ಎಂದು ಆರೋಪಿಸಿದ ಅವರು, ನಾಳೆ ಬೆಳಗ್ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಅವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದ್ದರೂ ಅದು ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದರು.
ಕಾಂಗ್ರೆಸ್ನಲ್ಲಿ ಪ್ರಭಾವಿ ನಾಯಕರು ಮತ್ತು ರಾಜಕೀಯ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಸಚಿವರ ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಯಾಕೆ, ನಾವು ಪಕ್ಷ ಕಟ್ಟಿಲ್ಲವೆ? ನಾನೂ ಮೂರು ಬಾರಿ ಶಾಸಕನಾಗಿದ್ದೇನೆ’ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ ‘ಸಚಿವ ಸ್ಥಾನ, ಕೊಟ್ಟವರಿಗೇ ಕೊಡುತ್ತಿದ್ದರೆ, ನಾವು ರಾಜಕೀಯ ಯಾಕೆ ಮಾಡಬೇಕು?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಮ್ಮ ಕ್ಷೇತ್ರದ ಕಾರ್ಯಕರ್ತರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ ಎಂದು ಹೇಳಿದ ಅವರು, ‘ಜಿಲ್ಲೆಯಲ್ಲಿ ಮತ್ತು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗಾಗಿ ದುಡಿದಿದ್ದೇವೆ. ಕಾರ್ಯಕರ್ತರು ಕಣ್ಣೀರು ಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಮುಂದುವರಿಸಬೇಕೇ ಬೇಡವೇ ಎಂದು ಯೋಚಿಸುತ್ತಿದ್ದೇನೆ’ ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದರು.






