ಜನಮನ
ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆ

Views: 61
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.
402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೀಗ, ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಗೃಹ ಸಚಿವರ ಸ್ಪಷ್ಟನೆ ಏನು? ನಾನು ಬೆಳಿಗ್ಗೆ ನಿವಾಸದ ಬಳಿ ಮಾತನಾಡುವಾಗ ಸೆಪ್ಟೆಂಬರ್ 28ರಂದು ಪರೀಕ್ಷೆ ನಡೆಸುವುದಾಗಿ ಹೇಳಿದ್ದೆ. ಆದರೆ, ಆ ದಿನ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.






