ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಉದಯ್ ಜೈನ್ ಎಸ್ಐಟಿ ವಿಚಾರಣೆ

Views: 140
ಕನ್ನಡ ಕರಾವಳಿ ಸುದ್ದಿ: 2012ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯ ಅವರ ಕುಟುಂಬದಿಂದ ಆರೋಪ ಎದುರಿಸುತ್ತಿರುವ ಉದಯ್ ಜೈನ್ ಬುಧವಾರ ಎಸ್ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾದ ಉದಯ್ ಜೈನ್ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉದಯ್ ಜೈನ್ ಅವರ ವಿರುದ್ದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಎಸ್ಐಟಿ ನೀಡಿದ ಸಮನ್ಸ್ ನಂತರ ಜೈನ್ ಹಾಜರಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಸುದ್ದಿಗಾರರೊಂದಿಗೆ ಉದಯ್ ಜೈನ್ ಹೇಳಿದ್ದೇನು?
ಎಸ್ಐಟಿ ವಿಚಾರಣೆಗೆ ಹಾಜರಾದ ಉದಯ್ ಜೈನ್ ಸುದ್ದಿಗಾರರೊಂದಿಗೆ ಮಾತನಾಡಿ, ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು. ಸೌಜನ್ಯ ಕೊಲೆ ಪ್ರಕರಣದ ಎಫ್ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು .ಅಂತೆಯೇ, ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ ಎಂದರು.