ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ

Views: 148
ಬೆಂಗಳೂರು:ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಇಂದು ಬಿಜೆಪಿಗೆ ಸೇರ್ಪಡೆಯಾದರು.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಅವರು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ದಾಸ್, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿ ಕಮಲ ಮುಡಿದರು.ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಇನ್ನಿತರ ನಾಯಕರು ಸುಮಲತಾ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷದ ಚಿಹ್ನೆಯ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.ಇದೇ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಸಹ ಬಿಜೆಪಿ ಸೇರಿದರು.
ಸುಮಲತಾ ಅಂಬರೀಷ್ ಅವರು ಬಿಜೆಪಿ ಸೇರ್ಪಡೆಗೂ ಮುನ್ನ ತಮ್ಮ ಬೆಂಬಲಿಗರೊಂದಿಗೆ ಕಂಠೀರವ ಸ್ಟುಡಿಯೋಗೆ ತೆರಳಿ ಅಲ್ಲಿರುವ ರೆಬಲ್ಸ್ಟಾರ್ ಅಂಬರೀಷ್ರವರ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ನೇರವಾಗಿ ಬಿಜೆಪಿ ಕಚೇರಿಗೆ ಆಗಮಿಸಿದರು.ಈ ಸಂದರ್ಭದಲ್ಲಿ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನಿ ಅಸ್ತ್ರದ ಮೂಲಕ ಸುಮಲತಾ ಅಂಬರೀಷ್ ಅವರು ಮಂಡ್ಯದಲ್ಲಿ ಪಕ್ಷೇತರರಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾರನ್ನು ಬೆಂಬಲಿಸಿತ್ತು. ಗೆದ್ದ ನಂತರ ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಯಿತು.
ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಕೈತಪ್ಪಿತ್ತು.ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗಿತ್ತಾದರೂ ಬಿಜೆಪಿ ವರಿಷ್ಠರ ಅಭಯದ ಮೇರೆಗೆ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿದ್ದು, ಅದರಂತೆ ಇಂದು ಬಿಜೆಪಿ ಸೇರಿದರು.






