ಹಾಸಿಗೆ ಕೆಳಗೆ 11 ಲಕ್ಷ ರೂಪಾಯಿ ಬಚ್ಚಿಟ್ಟಿದ್ದ ಸೈಬರ್ ಕ್ರೈಂ ಪೊಲೀಸ್ ವಶಕ್ಕೆ
Views: 210
ಕನ್ನಡ ಕರಾವಳಿ ಸುದ್ದಿ: ನಗರದ ಸೈಬರ್ ಕ್ರೈಮ್ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಶಂಕಿತ ವ್ಯಕ್ತಿಯ ನಗದು ತುಂಬಿದ ಚೀಲವನ್ನು ತನ್ನ ಮನೆಯಲ್ಲಿ ಅಡಗಿಸಿದ್ದ ವಿಚಾರ ಬೆಳಕಿಗೆ ಬಂದಿದೆ.
ಹೆಡ್ ಕಾನ್ಸ್ಟೇಬಲ್ ಜಬಿಯುಲ್ಲಾ ಐ. ಗುಡಿಯಾಲ್ (48) ತಮ್ಮ ಮಲಗುವ ಕೋಣೆಯ ಹಾಸಿಗೆಯ ಕೆಳಗೆ ಸುಮಾರು 11 ಲಕ್ಷ ರುಪಾಯಿ. ನಗದನ್ನು ಕೂಡಿಟ್ಟಿದ್ದು, ಘಟನೆ ಬೆಳಕಿಗೆ ಬಂದಾಗ ತಾನು ಸಂಗ್ರಹಿಸಿದ ಹಣ ಠಾಣೆಗೆ ಒಪ್ಪಿಸಲು ಮರೆತಿರುವುದಾಗಿ ಸಬೂಬು ಹೇಳಿದ್ದಾರೆ. ಅವರ ಸಹೋದ್ಯೋಗಿಗಳೂ ಈ ವಿಚಾರದಲ್ಲಿ ಮೌನ ವಹಿಸಿದ್ದು ಅನುಮಾನ ಹುಟ್ಟು ಹಾಕಿದೆ.
ಶಂಕಿತನ ಕಾರಿನಲ್ಲಿದ್ದ ಹಣ ಅಡಗಿಸಿಟ್ಟ ಕಾನ್ಸ್ಟೇಬಲ್: ಎರಡು ವಾರಗಳ ಹಿಂದೆ ಸಿಸಿಪಿಎಸ್ ತಂಡವು ಸೈಬರ್ ವಂಚನೆ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ದೇವನಹಳ್ಳಿಯಲ್ಲಿ ಪತ್ತೆಹಚ್ಚಿತ್ತು. ಪೊಲೀಸರು ತನ್ನ ಹಿಂದೆ ಬಿದ್ದಿರುವುದನ್ನು ತಿಳಿದ ಶಂಕಿತನು ತನ್ನ ಕಾರನ್ನು ಬಿಟ್ಟು ಕಾಲ್ನಡಿಗೆಯಲ್ಲಿ ಪರಾರಿಯಾಗಿದ್ದನು. ಈ ವೇಳೆ ಶಂಕಿತನ ಕಾರಿನಲ್ಲಿ ನಗದು, ಲ್ಯಾಪ್ಟಾಪ್ ಮತ್ತು ಇನ್ನಿತರ ವಸ್ತುಗಳನ್ನು ಹೊಂದಿದ್ದ ಚೀಲ ಸಿಕ್ಕಿತ್ತು. ಜಬಿಯುಲ್ಲಾ ಇದನ್ನು ಗಮನಿಸಿದ್ದರೂ, ತಂಡಕ್ಕೆ ಮಾಹಿತಿ ನೀಡದೆ ಸುಮ್ಮನೆ ಚೀಲವನ್ನು ಮನೆಗೆ ತೆಗೆದುಕೊಂಡು ಹೋಗಿದ್ದರೆಂದು ತಿಳಿದು ಬಂದಿದೆ. ತನಿಖಾ ತಂಡ ತಾಣೆಗೆ ಮರಳಿದಾಗ, ಶಂಕಿತ ಪರಾರಿಯಾಗಿದ್ದಾನೆ ಎಂಬ ವರದಿ ಮಾತ್ರ ಸಲ್ಲಿಸಲಾಯಿತು. ಬ್ರಿಫಿಂಗ್ನಲ್ಲಿ ಕಾರಿನಲ್ಲಿದ್ದ ಚೀಲ ಮತ್ತು ಅದರಲ್ಲಿನ ವಸ್ತುಗಳ ಪ್ರಸ್ತಾಪ ಯಾರೂ ಮಾಡಿರಲಿಲ್ಲ.
ಅಮಾನತಿನ ಭಯ: ಕೆಲವು ದಿನಗಳ ನಂತರ ಶಂಕಿತನು ನಿರೀಕ್ಷಣಾ ಜಾಮೀನು ಪಡೆದು ತನ್ನ ಕಾರನ್ನು ವಾಪಸು ಪಡೆಯಲು ಬಂದಾಗ ಕಾರಿನ ಟ್ರಂಕ್ ತೆರೆಯುತ್ತಿದ್ದಂತೆ ಲಕ್ಷಾಂತರ ರುಪಾಯಿ ಹೊಂದಿದ್ದ ಬ್ಯಾಗ್ ಕಾಣೆಯಾದಿರುವುದು ಅವನ ಗಮನಕ್ಕೆ ಬಂದಿತ್ತು. ತಕ್ಷಣವೇ ಇದನ್ನು ಹಿರಿಯ ಅಧಿಕಾರಿಗಳಿಗೆ ತಿಳಿಲಾಗಿ, ಚೀಲವನ್ನು ಕೊನೆಯದಾಗಿ ಯಾರು ನಿರ್ವಹಿಸಿದರು ಎಂಬುದರ ಕುರಿತು ನಡೆದ ಆಂತರಿಕ ಪರಿಶೀಲನೆ ನಡೆಸಲಾಯಿತು. ಈ ವೇಳೆ ಉಪ ಪೊಲೀಸ್ ಆಯುಕ್ತ ಪಿ. ರಾಜಾ ಇಮಾಮ್ ಖಾಸಿಂ ಅವರನ್ನು ವಿಚಾರಣೆ ನಡೆಸಿದಾಗ, ಅವರು ಬ್ಯಾಗ್ ಅನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾಗಿ ಒಪ್ಪಿಕೊಂಡರು. ನಂತರ ಅವರ ಮನೆ ಮೇಲೆ ದಾಳಿ ನಡೆಸಿ ಚೀಲ ಮತ್ತು ಎಲ್ಲಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಜಬಿಯುಲ್ಲಾ ವಿರುದ್ಧ ಕಠಿಣ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಅವರನ್ನು ಅಮಾನತುಗೊಳಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.






