ಕರಾವಳಿ

ಕೋಟ ಮಧುವನ ಕಾಲೇಜಿನ ಆಡಳಿತ ಮಂಡಳಿ ಗಲಾಟೆ,ಲಂಚ ಪ್ರಕರಣಕ್ಕೆ ಕೋಟ ಠಾಣೆ ಉಪನಿರೀಕ್ಷಕ ಅಮಾನತು:ಎಸ್ಪಿ

Views: 11

ಕೋಟ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕುಮಾರ್‌ ಪತ್ರಿಕೆಗೆ ತಿಳಿಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಎಸ್‌.ಪಿ.ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಅಧ್ಯಕ್ಷತೆ ವಿಚಾರಕ್ಕೆ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್‌ ಹಾಗೂ ಮಹಿಮಾ ಮಧು ಭಾಸ್ಕರ್‌ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್‌ ವಿರುದ್ಧ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ಧದ ದೂರಿಗೆ ಬಿ.ರಿಪೋರ್ಟ್‌ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ.

ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌‍ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್‌ ಗಾಣಿಗ ಕೋಟ ವೀಡಿಯೋ ಮೂಲಕ ಎಸ್‌.ಪಿ. ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್‌ ಆಗಿತ್ತು.

Related Articles

Back to top button