ದಿಂಗಾಲೇಶ್ವರ ಸ್ವಾಮೀಜಿ ಕಣದಿಂದ ಹಿಂದೆ ಸರಿಸಲು ಬಿಎಸ್ವೈಗೆ ಜವಾಬ್ದಾರಿ,ವರಿಷ್ಠರ ಸೂಚನೆ

Views: 72
ದಿಂಗಾಲೇಶ್ವರ ಸ್ವಾಮೀಜಿ ಅವರ ಮನವೊಲಿಸಿ ಕಣದಿಂದ ಹಿಂದಕ್ಕೆ ಸರಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಜ್ಯದ ಬಿಜೆಪಿ ನಾಯಕರೊಬ್ಬರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿ, ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯ ಹಿಂದೆ ಯಡಿಯೂರಪ್ಪ ಅವರ ಕೈವಾಡವಿದೆ. ಪರಿಸ್ಥಿತಿ ಕೈಮೀರಿ ಹೋಗುವ ಮುನ್ನ ಯಡಿಯೂರಪ್ಪ ಮೂಲಕವೇ ಸ್ವಾಮೀಜಿ ಅವರನ್ನು ಕಣದಿಂದ ದೂರ ಸರಿಸಲು ಸೂಚಿಸಬೇಕು ಎಂದು ದೂರಿದ್ದಾರೆ ಎನ್ನಲಾಗಿದೆ.
ಬಳಿಕ ಅಮಿತ್ ಶಾ ಅವರು ಯಡಿಯೂರಪ್ಪ ಅವರಿಗೆ ಕರೆ ಮಾಡಿ, ದಿಂಗಾಲೇಶ್ವರ ಸ್ವಾಮೀಜಿ ಮನವೊಲಿಕೆ ನಿಮ್ಮ ಜವಾಬ್ದಾರಿ, ಒಂದು ವೇಳೆ ಸ್ಪರ್ಧೆಗೆ ಇಳಿದರೆ ಲಿಂಗಾಯತ ಮತಗಳು ಹೋಗದಂತೆ ನೋಡಿಕೊಳ್ಳುವುದು ಕೂಡ ನಿಮ್ಮ ಜವಾಬ್ದಾರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಇದಾದ ಬಳಿಕ ಯಡಿಯೂರಪ್ಪ ಅವರು ದಿಂಗಾಲೇಶ್ವರ ಸ್ವಾಮೀಜಿ ಭೇಟಿ ಮಾಡಲು ಪ್ರಯತ್ನ ಆರಂಭಿಸಿದ್ದಾರೆ. ಅದರ ಭಾಗವಾಗಿಯೇ ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ನೀಡುತ್ತಿರುವ ಬೇರೆ ಬೇರೆ ಮಠಾಧೀಶರನ್ನು ಮನವೊಲಿಸಲು ಮುಂದಾಗಿದ್ದಾರೆ. ಖುದ್ದು ಯಡಿಯೂರಪ್ಪ ಅವರು ಒಂದೆರಡು ದಿನಗಳಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭೇಟಿಗಾಗಿ ಹುಬ್ಬಳ್ಳಿಗೆ ತೆರಳಲಿದ್ದಾರೆ.






