ಉಡುಪಿ :ರೈಲು ಹಳಿಯಲ್ಲಿ ಕಂಡುಬಂದ ಲೋಪ,ಸಕಾಲದಲ್ಲಿ ಪತ್ತೆಹಚ್ಚಿದ ಸಿಬ್ಬಂದಿ, ಸಂಭಾವ್ಯ ಭಾರಿ ರೈಲು ದುರಂತಕ್ಕೆ ಬ್ರೇಕ್!

Views: 108
ಉಡುಪಿ, ಹಳಿಯಲ್ಲಿ ಕಂಡುಬಂದ ಲೋಪವನ್ನು ಸಕಾಲದಲ್ಲಿ ಪತ್ತೆಹಚ್ಚಿದ ಸಿಬ್ಬಂದಿಯೊಬ್ಬರು ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತಂದ ಕಾರಣ ಸಂಭಾವ್ಯ ಭಾರಿ ರೈಲು ದುರಂತವೊಂದು ತಪ್ಪಿದೆ.
ಶನಿವಾರ ತಡರಾತ್ರಿ 2.25ರ ಸುಮಾರಿಗೆ ಉಡುಪಿಯ ಇನ್ನಂಜೆ ಮತ್ತು ಪಡುಬಿದ್ರಿ ನಡುವಿನ ರೈಲ್ವೇ ಹಳಿಯಲ್ಲಿ ಲೋಪ ಕಂಡುಬಂದಿತ್ತು. ರಾತ್ರಿಯಲ್ಲಿ ಹೈಪವರ್ ಟಾರ್ಚ್ ಸಹಾಯದಿಂದ ಇದನ್ನು ಗಮನಿಸಿದ ಟ್ರ್ಯಾಕ್ ನಿರ್ವಹಣಾ ಸಿಬ್ಬಂದಿ ತಕ್ಷಣವೇ ಉಡುಪಿಯ ಆರ್ಎಂಇಗೆ ಸಮಸ್ಯೆಯ ಬಗ್ಗೆ ಮಾಹಿತಿ ರವಾನಿಸಿದ್ದಾರೆ
ತಕ್ಷಣವೇ ಉಡುಪಿಯಿಂದ ಟ್ರ್ಯಾಕ್ ನಿರ್ವಹಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಸಮಸ್ಯೆಯನ್ನು ಸರಿಪಡಿಸಲಾಯಿತು.
ರೈಲು ಹಳಿಯಲ್ಲಿ ಲೋಪ ಕಂಡುಬಂದ ಕೆಲವೇ ಕ್ಷಣಗಳಲ್ಲಿ ಆ ಮಾರ್ಗವಾಗಿ ಎಲ್ಟಿಟಿ-ತಿರುವನಂತಪುರ ಸೆಂಟ್ರಲ್ ನೇತ್ರಾವತಿ ಎಕ್ಸ್ಪ್ರೆಸ್ ಹಾಗೂ ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್ಪ್ರೆಸ್ ಸಂಚರಿಸುವುದರಲ್ಲಿತ್ತು. ಮುಂಜಾನೆ 3 ಗಂಟೆಗೆ ನೇತ್ರಾವತಿ ಎಕ್ಸ್ಪ್ರೆಸ್ ಮಂಗಳೂರು ಜಂಕ್ಷನ್ ಕಡೆಗೆ ತೆರಳಬೇಕಿತ್ತು. ಪಂಚಗಂಗಾ ಎಕ್ಸ್ಪ್ರೆಸ್ ಮುಂಜಾನೆ 4 ಗಂಟೆಯ ಸುಮಾರಿಗೆ ಹಾದು ಹೋಗಬೇಕಿತ್ತು. ಹಳಿ ದೋಷ ಸರಿಪಡಿಸುವವರೆಗೂ ಎರಡೂ ರೈಲುಗಳನ್ನು ನಂದಿಕೂರು ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲಿಸಲಾಯಿತು.
ಹಳಿ ದುರಸ್ತಿ ಕಾರ್ಯ ಸುಮಾರು ಮೂರು ಗಂಟೆಗಳನ್ನು ತೆಗೆದುಕೊಂಡಿತು. ಈ ಮಾರ್ಗದ ಮೂಲಕ ಹಾದು ಹೋಗಬೇಕಿದ್ದ ಇತರ ರೈಲುಗಳನ್ನು ಸುರತ್ಕಲ್ ಮತ್ತು ಉಡುಪಿ ರೈಲು ನಿಲ್ದಾಣಗಳಲ್ಲಿ ತಡೆಹಿಡಿಯಲಾಯಿತು. ದುರಸ್ತಿಯ ನಂತರ ದೋಷ ಇದ್ದ ಜಾಗದಲ್ಲಿ ತಾತ್ಕಾಲಿಕ ಅವಧಿಗೆ ಗಂಟೆಗೆ 20 ಕಿಲೋಮೀಟರ್ ವೇಗದ ಮಿತಿಯೊಂದಿಗೆ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ಕೊಂಕಣ ರೈಲ್ವೇ ವಿಭಾಗದ ಮಂಗಳೂರು ವಿಭಾಗದ ಪಿಆರ್ಒ ತಿಳಿಸಿದ್ದಾರೆ.






