ಸಂಸದರಾಗಿ ಮೊದಲ ಬಾರಿಗೆ ಉಡುಪಿಗೆ ಬೇಟಿ: ಸ್ಥಗಿತಗೊಂಡ ಇಂದ್ರಾಳಿ ಮೇಲ್ಸೇತುವೆ ಸೆ.15 ರೊಳಗೆ ಕಾಮಗಾರಿ ಪೂರ್ಣ: ಕೋಟ ಶ್ರೀನಿವಾಸ್ ಪೂಜಾರಿ

Views: 62
ಉಡುಪಿ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ ನಗರದ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲಸ ಸ್ಥಗಿತವಾಗಿ ನಾಲ್ಕು ವರ್ಷವಾಗಿದೆ. ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಾನು ಭೇಟಿ ನೀಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇನೆ. ಜುಲೈ 2ರ ಒಳಗಾಗಿ ಮೆಸ್ಕಾಂನವರು ವಿದ್ಯುತ್ ಕಂಬಗಳನ್ನು ಶಿಫ್ಟ್ ಮಾಡುವುದಾಗಿ ಹೇಳಿದ್ದಾರೆ ಎಂದರು.
ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಸಹ ಅವರು ನೀಡಿದ್ದಾರೆ. ಮಳೆ ವಿಪರೀತವಾದರೆ 15 ದಿನ ವ್ಯತ್ಯಾಸ ಆಗಬಹುದು. ತಮ್ಮಿಂದ ಆಗಿರುವ ಪ್ರಮಾದವನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸನ್ನು ಮಾಡುತ್ತೇನೆ ಎಂದು ಹೇಳಿದರು






