ಪ್ರಬಲಗೊಂಡ ನೈರುತ್ಯ ಮಾನ್ಸೂನ್: ಹೈ ಅಲರ್ಟ್ ಘೋಷಣೆ

Views: 174
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳವರೆಗೆ ಹೈ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಸೇರಿದಂತೆ ನಾಲ್ಕು ದಿನ ಆರೆಂಜ್ ಅಲರ್ಟ್ ಮತ್ತು ಜುಲೈ 10ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ 40ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆ ಕೂಡ ಸಂಭವಿಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಮೇಲೆ ಗಾಳಿಯ ವೇಗ 30ರಿಂದ 40 ಕಿಲೋಮೀಟರ್ ಇರಲಿದ್ದು, ಭಾರಿ ಮಳೆಯಾಗಲಿದೆ. ಉಳಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ನಲ್ಲಿ 17 ಸೆಂಟಿಮೀಟರ್ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ವೀಕ್ಷಣಾಲಯದ ಸುತ್ತಮುತ್ತ 16, ಉಡುಪಿಯಲ್ಲಿ 15 ಮತ್ತು ಅಂಕೋಲಾದಲ್ಲಿ 13 ಸೆಂಟಿಮೀಟರ್ ಮಳೆ ಸುರಿದಿದೆ.
ಸರಾಸರಿ ಸಮುದ್ರ ಮಟ್ಟದಲ್ಲಿರುವ ಆಫ್- ಕೇರಳ ಟ್ರಫ್ ಈಗ ದಕ್ಷಿಣ ಗುಜರಾತ್ ಮತ್ತು ಕರ್ನಾಟಕ ಕರಾವಳಿಯಲ್ಲಿ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.






