ಸಿಎಂ ಆರೋಪಕ್ಕೆ ಕೋಟ ಶ್ರೀನಿವಾಸ ಪೂಜಾರಿ ಗರಂ,ವಿಧಾನ ಸೌಧದ ಎದುರು ಪ್ರತಿಭಟನೆ ಎಚ್ಚರಿಕೆ

Views: 111
ಉಡುಪಿ: ನನ್ನ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪವನ್ನು ವಾಪಸ್ ಪಡೆಯದಿದ್ದರೆ ವಿಧಾನಸೌಧ ಮತ್ತು ವಿಕಾಸ ಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಮಾಜಿ ಸಚಿವ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಶನಿವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸಿಐಡಿ ಅವರ ಕೈಯಲ್ಲಿಯೇ ಇದೆ. ಮುಖ್ಯಮಂತ್ರಿ ಆಗಿ ಒಂದು ವರ್ಷ ಕೂಡ ಕಳೆಯಿತು. ನಾನು ತಪ್ಪು ಮಾಡಿದರೆ ಜೈಲು ಶಿಕ್ಷೆ ಸೇರಿ ಏನನ್ನು ಕೊಡುವ ಅಧಿಕಾರ ಅವರಿಗೆ ಇತ್ತು. ಆದರೆ ಅವರು ಯಾವುದನ್ನು ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ವಾಲ್ಮೀಕಿ ಹಗರಣದ ಆರೋಪ ಅವರ ಮೇಲೆ ಬಂದಾಗ ಬೇರೆಯವರ ತಲೆ ಮೇಲೆ ಹಾಕಲು ಹೀಗೆ ಹೇಳುತ್ತಿದ್ದಾರೆ ಎಂದರು.
ಆದುದರಿಂದ ನನ್ನ ಹೆಸರು ಉಲ್ಲೇಖಿಸಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲವಾದರೆ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ, ವಾರದೊಳಗೆ ಮುಖ್ಯಮಂತ್ರಿಗಳು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ನಾನು ಧರಣಿ ಕುಳಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ. ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವ ಬಗ್ಗೆಯೂ ಯೋಚನೆ ಮಾಡುತ್ತೇನೆ ಎಂದು ಹೇಳಿದರು.






