ರಾಜಕೀಯ

ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಜಿಲ್ಲಾಡಳಿತದ ವಿರುದ್ದ ಅಹೋರಾತ್ರಿ ದಿಢೀರ್ ಧರಣಿ

Views: 173

ಬೈಂದೂರು: ರಾಜ್ಯ ಸರಕಾರ ಹಾಗೂ ಉಡುಪಿ ಜಿಲ್ಲಾಡಳಿತ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿರುವುದಾಗಿ ಆರೋಪಿಸಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಬೈಂದೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಸೋಮವಾರ ದಿಡೀರ್ ಧರಣಿ ಆರಂಭಿಸಿದ್ದಾರೆ

ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ  ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು. ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದ ಶಾಸಕರು ಜಿಲ್ಲಾಡಳಿತದ ವಿರುದ್ದ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕರು, ಜನ ಕರೆದಲ್ಲಿಗೆ ನಾನು ಹೋಗಬೇಕು, ನಾನು ಕರೆದಲ್ಲಿಗೆ ಜನರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಬರಬೇಕು. ಜನರ ಸೇವೆಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇರುವುದು. ಸರ್ಕಾರ ನೀಡಿದ ಒಂದು ಕಚೇರಿಯಲ್ಲಿ ಕಾಲ ಮೇಲೆ ಕಾಲು ಹಾಕಿ ದರ್ಬಾರ್‌ ನಡೆಸುವ ವ್ಯಕ್ತಿ ನಾನಲ್ಲ. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಚೇರಿ ತೆರೆಯಲಾಗಿದೆ. ಈ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡುತ್ತಿರುವುದು ಏಕೆ? ಜಿಲ್ಲಾಧಿಕಾರಿಗಳಿಗೆ ರಾಜಕೀಯ ಒತ್ತಡವಿದ್ದರೆ ನೇರ ಹೇಳಿ ಬಿಡಲಿ. ಶಾಸಕನ ಹಕ್ಕು ಮೊಟಕುಗೊಳಿಸುತ್ತಿರುವ ಆಡಳಿತಯಂತ್ರದ ವಿರುದ್ಧ ಅಹೋರಾತ್ರಿ ಧರಣಿಯ ಸಮರ ಸಾರಿದ್ದೇನೆ. ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ತಹಶೀಲ್ದಾರರು ಮನ ಒಲಿಸುವ ಪ್ರಯತ್ನ ಮಾಡಿದರೂ ಒಪ್ಪಿದೆ ಪ್ರತಿಭಟನೆ ಮುಂದುವರಿಸಿದ್ದಾರೆ.

ಧರಣಿಯಲ್ಲಿ ಬಿಜೆಪಿ ಮುಖಂಡ ಸದಾನಂದ ಉಪ್ಪಿನಕುದ್ರು, ಬಿಎಸ್ ಸುರೇಶ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಕಲ್ಗದ್ದೆ, ಶಿವರಾಮ್ ಪೂಜಾರಿ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

Related Articles

Back to top button
error: Content is protected !!