ಬಂಗಾಳಕೊಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ ಮತ್ತೆ 4 ದಿನ ಧಾರಾಕಾರ ಮಳೆ

Views: 112
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಮಳೆ ಮತ್ತೆ ಪ್ರಬಲವಾಗಿದ್ದು, ರಾಜ್ಯದಲ್ಲೆಡೆ ಮುಂದಿನ ನಾಲ್ಕು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆಪ್ಟೆಂಬರ್ 5 ರಿಂದ 8ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ನಾಳೆ ಯೆಲ್ಲೋ ಅರ್ಲಟ್ ಇರಲಿದೆ. ಉಳಿದಂತೆ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಳಿಮುಖಗೊಂಡಿದೆ. ಕರಾವಳಿ, ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಮೋಡದ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.






