ಕರಾವಳಿ

ಮಂಗಳೂರು: ಕೋಟ್ಯಾಂತರ ರೂ.ಮೌಲ್ಯದ ಡ್ರಗ್ಸ್ ವಶ, ನೈಜೀರಿಯಾ ಪ್ರಜೆ ಬಂಧನ 

Views: 61

ಮಂಗಳೂರು: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ 6 ಕೋಟಿ ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ಡ್ರಗ್ಸ್ ನ್ನು  ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ವಾಸಿ ನೈಜೀರಿಯಾ ಪ್ರಜೆ ಪೀಟರ್ ಇಕೆಡಿ ಬೆಲೆನ್ವೊ ಬಂಧಿತ ಆರೋಪಿ.

ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದು, ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಈತನಿಂದ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲಾಡ್ಜ್ವೊಂದರಲ್ಲಿ ಇದ್ದುಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹೈದರ್ ಯಾನೆ ಹೈದರ್ ಆಲಿ(51) ಎಂಬಾತನನ್ನು ಬಂಧಿಸಿ, ಆತನಿಂದ 75,000 ಮೌಲ್ಯದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.

ಈ ಪ್ರಕರಣದಲ್ಲಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಈ ತನಿಖೆಯ ವೇಳೆ ಆರೋಪಿ ಹೈದರ್ ಯಾನೆ ಹೈದರ್ ಆಲಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್ಗಳ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಪ್ರಮುಖ ಆರೋಪಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ವಿದೇಶಿ ಪ್ರಜೆ ಎಂದು ತಿಳಿದುಬಂದಿತ್ತು. ಅದರಂತೆ ಬೆಂಗಳೂರು ನಗರದ ದೊಮ್ಮಸಂದ್ರ ಗ್ರಾಮದ ಸ್ವಾಮಿ ವಿವೇಕಾನಂದ ನಗರದ ಬಾಡಿಗೆ ಮನೆಯೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುವನ್ನು ಹೊಂದಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.

ವಾಸವಿದ್ದ ಬಾಡಿಗೆ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ಗಳು, 10 ವಿವಿಧ ಬ್ಯಾಂಕ್ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6 ಕೋಟಿಗೂ ಅಧಿಕ ಎಂದು ತಿಳಿದುಬಂದಿದೆ. ಆರೋಪಿ ಪೀಟರ್ ಅಕೆಡಿ ಬೆಲನೋವು ವಿರುದ್ಧ ಈ ಹಿಂದೆ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ 2023ನೇ ಇಸವಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈತ ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧೆಡೆ ಅಲ್ಲದೇ ಕೇರಳ ರಾಜ್ಯಕ್ಕೆ ಕೂಡಾ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದನು. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದರು.

Related Articles

Back to top button
error: Content is protected !!