ರಾಜ್ಯಾದ್ಯಂತ ಹಿಂಗಾರು ಆರ್ಭಟ: ಭಾರಿ ಮಳೆ ಮುನ್ಸೂಚನೆ

Views: 80
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರದ ಬಳಿಕ ಹಿಂಗಾರಿನ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ, ಮುಂದಿನ 24 ಗಂಟೆಗಳ ಕಾಲ ಕೆಲವೆಡೆ ಆರೆಂಜ್ ಮತ್ತು ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಚಂಡಮಾರುತದ ಪರಿಚಲನೆಯಿಂದಾಗಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದ್ದು, ನೈಋತ್ಯ ಬಂಗಾಳ ಕೊಲ್ಲಿಯಿಂದ ದಕ್ಷಿಣ ತಮಿಳುನಾಡಿನ ಮೂಲಕ ಲಕ್ಷದ್ವೀಪದವರೆಗೆ ಸಾಗುತ್ತಿದೆ. ಇದು 1.5 ಕಿ.ಮೀಯಿಂದ 5.8 ಕಿ.ಮೀ ಎತ್ತರದಲ್ಲಿದೆ. ಇದರಿಂದ ಮಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ.
ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಹಾಗು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.






