ಇತರೆ

ಕತ್ತು ಸೀಳಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Views: 36

ಬೆಂಗಳೂರು: ನಗರದ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಕ್ಕೂರಿನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮೋಹನ್ ಕುಮಾರ್ (45) ಎಂದು ಗುರುತಿಸಲಾಗಿದೆ.

ಮನೆಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ವಿ.ವಿ.ಪುರಂ ಠಾಣೆಯ ಪೊಲೀಸರು ಕೆಲವು ದಿನಗಳ ಹಿಂದೆ ಮೋಹನ್ ಕುಮಾರ್‌ ಅವರ ಸಂಬಂಧಿಯೋರ್ವನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿ ನೀಡಿದ್ದ ಮಾಹಿತಿ ಆಧರಿಸಿ ಪೊಲೀಸರು ಕದ್ದ ಚಿನ್ನವನ್ನು ಮೋಹನ್ ಕುಮಾರ್ ನಿವಾಸದಲ್ಲಿ ಜಪ್ತಿ ಮಾಡಿದ್ದರು. ಆ ಸಂದರ್ಭದಲ್ಲಿ ಚಿನ್ನ ಕಳೆದುಕೊಂಡಿದ್ದ ವ್ಯಕ್ತಿ ಮೋಹನ್ ಕುಮಾರ್ ಜೊತೆ ಗಲಾಟೆ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಮನನೊಂದು ಮೋಹನ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ.ಸಜೀತ್, ”ಜಕ್ಕೂರು ಡಬಲ್ ರೋಡ್ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ ಮೃತದೇಹ ಸಿಕ್ಕಿದೆ. ಮೃತ ವ್ಯಕ್ತಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಇತ್ತೀಚಿಗೆ ಚಿನ್ನದ ವಿಚಾರಕ್ಕಾಗಿ ಖಾಸಗಿ ವ್ಯಕ್ತಿಯೊಬ್ಬನಿಂದ ಬೆದರಿಕೆ ಇದ್ದುದರಿಂದ ನೊಂದಿದ್ದರು ಎಂದು ಮೃತನ ಪತ್ನಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ” ಎಂದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಠಾಣೆ ಪೊಲೀಸರು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Related Articles

Back to top button
error: Content is protected !!