ರೇಣುಕಾಸ್ವಾಮಿ ಹತ್ಯೆ ಪ್ರಕರಣ:ದರ್ಶನ್, ಪವಿತ್ರಾಗೌಡ ಸೇರಿ 7ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

Views: 110
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಪ್ರಕರಣ ನಡೆದು ಆರು ತಿಂಗಳ ಬಳಿಕ ನಟ ದರ್ಶನ್ ಗೆ ಜಾಮೀನು ಲಭಿಸಿದೆ. ಇದರಿಂದಾಗಿ ದರ್ಶನ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೆನ್ನು ನೋವಿನ ಚಿಕಿತ್ಸೆಗಾಗಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.ಆದರೆ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಮುಂದುವರಿದಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.
ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ವಾದಿಸಿದ್ದರು.
ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.
ಜಾಮೀನಿನಿಂದ ದರ್ಶನ್ಗೆ ನಿರಾಳರಾಗಿದ್ದು ಅವರ ಮೇಲೆ ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳ ಬೇಕಾದ ಒತ್ತಡವೂ ಇಲ್ಲ. ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರೀಕರಣದಲ್ಲೂ ಭಾಗವಹಿಸಬಹುದಾಗಿದೆ.






