ಲೈಂಗಿಕ ದೌರ್ಜನ್ಯಆರೋಪ; ಮುದ್ದುಲಕ್ಷ್ಮಿ ಸೀರಿಯಲ್ ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ

Views: 118
ಕನ್ನಡ ಕರಾವಳಿ ಸುದ್ದಿ: ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಸಂಬಂಧ ಬೆಂಗಳೂರು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ.
ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಚರಿತ್ ಬಾಳಪ್ಪ ನಟಿಸಿದ್ದಾರೆ. ತೆಲುಗು ಭಾಷೆಯ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.ವಿವಾಹವಾಗುತ್ತೇನೆ ಎಂದು ನಂಬಿಸಿ ಪ್ರೀತಿಸಿ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಈ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ವಾಸ ಮಾಡುತ್ತಿದ್ದ ಮನೆಗೆ ತನ್ನ ಸಹಚರರ ಜೊತೆ ಅಕ್ರಮವಾಗಿ ಪ್ರವೇಶಿಸಿ ಚರಿತ್ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದೂ ಅವರು ದೂರಿನಲ್ಲಿ ವಿವರಿಸಿದ್ದಾರೆ. ಇಷ್ಟೇ ಅಲ್ಲದೆ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪವನ್ನೂ ಹೊರಿಸಿದ್ದಾರೆ. ಒಂದು ವೇಳೆ ಹಣ ಕೊಡದೇ ಇದ್ದಲ್ಲಿ ತನ್ನ ಜತೆ ಇರುವ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾರೆ.
ಕಿರುತೆರೆ ನಟ ಚರಿತ್ ಬಾಳಪ್ಪಗೆ 2017ರಲ್ಲಿ ನಟಿ ಮಂಜು ಅವರ ಜತೆ ವಿವಾಹವಾಗಿತ್ತು. 2022ರಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಇಬ್ಬರೂ ನ್ಯಾಯಾಲಯದಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ನ್ಯಾಯಾಲಯದ ಆದೇಶದಂತೆ ಪರಿಹಾರ ಹಣ ನೀಡುವಂತೆ ನೋಟಿಸ್ ಕಳುಹಿಸಿದ್ದಕ್ಕೆ ಚರಿತ್ ತನ್ನ ಮಾಜಿ ಪತ್ನಿ ಮಂಜುಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಮಂಜು ಅವರು ಚರಿತ್ ಬಾಳಪ್ಪ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.






