ಪೋಕ್ಸೋ ಪ್ರಕರಣ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ಶಾಕ್
Views: 227
ಕನ್ನಡ ಕರಾವಳಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದು ಮತ್ತು ಸಮನ್ಸ್ ಜಾರಿ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದೆ.
ಪೋಕ್ಸೋ ಪ್ರಕರಣದಲ್ಲಿ ಸಂಜ್ಞೇ ಪರಿಗಣಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಬಿಎಸ್ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಕೆಲ ತಿಂಗಳುಗಳಿಂದ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತ್ತು. ಗುರುವಾರ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ಆದೇಶ ನೀಡಿದೆ. ಇದು ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ಸಿಐಡಿ ವಿಚಾರಣೆಯು ಮುಂದುವರೆಯಲಿದೆ.
ವಿಚಾರಣಾ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ಅವರ ಪರವಾಗಿ ಸಲ್ಲಿಕೆ ಮಾಡುವ ವಿನಾಯಿತಿ ಮನವಿಯನ್ನು ವಿಚಾರಣಾಧೀನ ನ್ಯಾಯಾಲಯ ಪುರಸ್ಕರಿಸಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದರು. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ ಕೋರ್ಟ್ ಆದೇಶ ನೀಡಿದೆ.
ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯ ಪ್ರಕರಣ ನಿರ್ಧರಿಸಬೇಕು. ಪ್ರಮುಖವಾಗಿ ಹೈಕೋರ್ಟ್ ಮತ್ತು ಸಕ್ಷಮ ನ್ಯಾಯಾಲಯ ಮಾಡಿರುವ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರಭಾವಕ್ಕೆ ಒಳಗಾಗದೇ ಸಾಕ್ಷಿಯನ್ನು ಪರಿಗಣಿಸಬೇಕು ಎಂದು ಹೇಳಿದರು. ಆರೋಪ ಮುಕ್ತಿ ಸೇರಿಯೂ ಯಾವುದೇ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ. ಈ ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದ ಹೈಕೋರ್ಟ್ ತಿಳಿಸಿದೆ.






